Rain: ಭಾರೀ ಮಳೆಗೆ ಸೈಲೆಂಟ್ ಆದ ಸಕಲೇಶಪುರ- ಶಾಲೆಗಳಿಗೆ ನಾಳೆ ರಜೆ!
ಹಾಸನ ಜುಲೈ 24: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಹಿನ್ನೆಲೆ, ಸಕಲೇಶಪುರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹೆಚ್.ಕೆ .ಪಾಂಡು ರಜೆ ಘೋಷಿಸಿದ್ದಾರೆ. ಮಲೆನಾಡು ಸಕಲೇಶಪುರ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲಾಧಿಕಾರಿಗಳು ಅನುಮತಿ ಪಡೆದು ರಜೆ ಘೋಷಿಸಲಾಗಿದೆ.
ಹಾಸನದಲ್ಲಿ ಕಳೆದ ಒಂದು ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತದ ಭೀತಿ ಕೂಡ ಹೆಚ್ಚಾಗಿದೆ.

ಎಲ್ಲೆಲ್ಲಿ ಶಾಲೆಗಳಿಗೆ ರಜೆ?
ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಕೆಲವೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದೀಗ ಮಳೆ ಉತ್ತರ ಕರ್ನಾಟಕ ಭಾಗಕ್ಕೂ ಎಂಟ್ರಿ ಕೊಟ್ಟಿದ್ದು ಧಾರಾಕಾರವಾಗಿ ಸುರಿಯುತ್ತಿದೆ. ಹಲವೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಎಲ್ಲೆಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂಬುದನ್ನ ತಿಳಿದುಕೊಳ್ಳೋಣ.
ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಕಿತ್ತೂರು ಹಾಗೂ ಬೈಲಹೊಂಗಲ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಬೆಳಗಾವಿ ಹಾಗೂ ಖಾನಾಪುರದಲ್ಲಿ ತಾಲ್ಲೂಕುಗಳಲ್ಲಿ ಮಾತ್ರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಅರಬ್ಬಿ ಸಮುದ್ರದ ಪೂರ್ವ ದಿಕ್ಕಿನಲ್ಲಿ ಟ್ರಫ್ ಸಂಚಾರ ಚುರುಕುಗೊಂಡಿದೆ. ಜುಲೈ 23 ರಿಂದ 26ರವರೆಗೆ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಮುಂಗಾರು ಮಾರುತ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 24 ರಿಂದ 26ರವರೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಹ ಜುಲೈ 24ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications