ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ಬೊಮ್ಮಾಯಿ ಕುರ್ಚಿಗೆ ಧಕ್ಕೆ!
ಹಾಸನ, ಸೆಪ್ಟೆಂಬರ್ 09; ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡಲಿದೆ? ಎಂಬುದು ಇನ್ನೂ ಅಂತಿಮವಾಗಿಲ್ಲ. 4 ಸ್ಥಾನಗಳಲ್ಲಿ ಜಯಗಳಿಸಿರುವ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆಯೇ? ಎಂದು ಕಾದು ನೋಡಬೇಕು.
ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಾಲಿಕೆಯಲ್ಲಿ ಮೇಯರ್ ಪಟ್ಟಕ್ಕಾಗಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಯಾವ ಪಕ್ಷ ಒಪ್ಪಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಕಲಬುರಗಿ ಪಾಲಿಕೆ ಫಲಿತಾಂಶ; ಬೆಂಗಳೂರಿಗೆ ಬಂದ ಜೆಡಿಎಸ್ ಸದಸ್ಯರು!
ಹಾಸನದಲ್ಲಿ ಗುರುವಾರ ಮಾತನಾಡಿದ ಎಚ್. ಡಿ. ರೇವಣ್ಣ, "ಜೆಡಿಎಸ್ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ" ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ಬೇಡಿಕೆಯಿಟ್ಟ ಜೆಡಿಎಸ್
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಸೋಮವಾರ ಘೋಷಣೆಯಾಗಿದೆ. 55 ವಾರ್ಡ್ಗಳ ಪೈಕಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4, ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮೇಯರ್ ಹುದ್ದೆಗೆ ಏರಲು ಬೇಕಾದ ಮ್ಯಾಜಿಕ್ ನಂಬರ್ 28. ಆದರೆ ಯಾವ ಪಕ್ಷಕ್ಕೂ ಬಹುಮತವಿಲ್ಲ. 4 ಸ್ಥಾನ ಗೆದ್ದಿರುವ ಜೆಡಿಎಸ್ ಬೆಂಬಲ ಅಗತ್ಯವಾಗಿದೆ.
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದವರ ಪಟ್ಟಿ
ನಮ್ಮ ಬಳಿ ಸಬ್ ಮೆರಿನ್ ಇದೆ
"ಜೆಡಿಎಸ್ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಹಡಗು ಮುಳುಗಿದರೆ ನಮ್ಮ ಬಳಿ ಸಬ್ ಮೆರಿನ್ ಇದೆ. ಪಕ್ಷ ಉಳಿಸಿಕೊಳ್ಳುವುದು ಗೊತ್ತು" ಎಂದು ಮಾಜಿ ಸಚಿವ ಎಚ್. ಡಿ. ರೇವಣ್ಣ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ಕೊಟ್ಟರು.
ಕಳೆದ ತಿಂಗಳು ಕರ್ನಾಟಕಕ್ಕೆ ಭೇಟಿ ನೀಡಿದ್ದ ಅರುಣ್ ಸಿಂಗ್, "ಜೆಡಿಎಸ್ ಮುಳುಗುವ ಹಡಗು" ಎಂದು ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ಎಚ್. ಡಿ. ಕುಮಾರಸ್ವಾಮಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು.
ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ
ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡಲಿದೆ? ಎಂಬ ಕುರಿತು ಎಚ್. ಡಿ. ರೇವಣ್ಣ ಮಾತನಾಡಿದರು, "ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಅವರು ಕಾರ್ಯಕರ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ" ಎಂದು ಹೇಳಿದರು.
ಕಾಂಗ್ರೆಸ್ ನಾಯಕರ ಮಾತುಕತೆ
ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮಲ್ಲಿಕಾರ್ಜುನ ಖರ್ಗೆ ಎಚ್. ಡಿ. ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ನಾಲ್ವರು ಅಭ್ಯರ್ಥಿಗಳು ಬೆಂಗಳೂರಿಗೆ ಬಂದಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ಮೇಯರ್ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದೆ.
ಮೈತ್ರಿಯ ಲೆಕ್ಕಾಚಾರವೇನು?
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಉಂಟಾದರೆ ಅದರ ಲೆಕ್ಕಾಚಾರ ಹೀಗಿರಲಿದೆ. 23 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಜೆಡಿಎಸ್ನ ನಾಲ್ಕು ಸದಸ್ಯರ ಬೆಂಬಲ ಪಡೆದರೆ ಒಂದು ಸಂಸದ, ಮೂವರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಹಿಡಿಯಬಹುದು.
ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲ ನೀಡಿದರೆ ಕಾಂಗ್ರೆಸ್ ಸಂಖ್ಯಾಬಲ 31ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ.