ನೀರಾವರಿ ಯೋಜನೆಗೆ ಬಜೆಟ್ನಲ್ಲಿ ಆದ್ಯತೆ : ಯಡಿಯೂರಪ್ಪ
ಹಾಸನ, ಜನವರಿ 05 : "ಮುಂದಿನ ಸಾಲಿನ ಬಜೆಟ್ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರೈತರ ಹಿತ ಕಾಯುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಹಾಸನದಲ್ಲಿ ಶನಿವಾರ ಮಾತನಾಡಿದ ಯಡಿಯೂರಪ್ಪ, "ರೈತರ ಉತ್ಪನ್ನಗಳು ಹೆಚ್ಚಾಗಬೇಕು ಅದಕ್ಕೆ ಬೆಂಬಲ ಸಿಗುವಂತಹ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ" ಎಂದರು.
"ಬಜೆಟ್ನಲ್ಲಿ ಹೊಸ ಅಂಶಗಳನ್ನು ಸೇರಿಸುವ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆಗಳನ್ನು ನಡೆಸಿ ಎಲ್ಲರ ಅಭಿಪ್ರಾಯಗಳನ್ನು ಒಗ್ಗೂಡಿಸಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

"ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ಧವಾಗಿದೆ. ಬೇಲೂರು, ಹಳೆಬೀಡು ಕೆರೆಗಳಿಗೆ ನೀರನ್ನು ಹರಿಸುವ ಬಹು ನಿರೀಕ್ಷಿತ ರಣಘಟ್ಟ ಯೋಜನೆಗೆ ಶೀಘ್ರವೇ ಅನುಮೋದನೆ ನೀಡಲಾಗುವುದು" ಎಂದು ಯಡಿಯೂರಪ್ಪ ಭರವಸೆ ನೀಡಿದರು.
"ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ರೈತರು ಆತ್ಮವಿಶ್ವಾಸದಿಂದ ಬದುಕಬೇಕು. ಅವರ ಜೀವನವನ್ನು ಬಲಪಡಿಸಿ ಶಕ್ತಿ ನೀಡಬೇಕು ಎಂಬುದು ಸರ್ಕಾರದ ಚಿಂತನೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು" ಎಂದರು.
ಮಾರ್ಚ್ನಲ್ಲಿ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದಾಗಿದೆ.
ಡಿಸಿಎಂ ಹುದ್ದೆ : ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಮಾತನಾಡಿದ ಯಡಿಯೂರಪ್ಪ, "ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರ ಎಲ್ಲರ ಅಭಿಪ್ರಾಯ ಪಡೆದು ನಂತರ ವರಿಷ್ಠರ ನಿರ್ಧಾರದಂತೆ ಕ್ರಮಕೈಗೊಳ್ಳಲಾಗುವುದು" ಎಂದರು.
"ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಅನುದಾನವನ್ನು ಕೂಡ ಬಿಡುಗಡೆ ಮಾಡಲು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ಎಲ್ಲವನ್ನು ಪ್ರಧಾನಿಯವರು ಗಮನಿಸಲಿದ್ದಾರೆ" ಎಂದು ಅವರು ಹೇಳಿದರು.












Click it and Unblock the Notifications