ಮಲ್ಲಾಪುರದಲ್ಲಿ ಪ್ರಚಾರದ ಗೀಳಿಗಾಗಿ ಬಡಿದಾಡಿಕೊಂಡ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು
ಹಾಸನ, ಮೇ, 05: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ರಾಜಕೀಯ ನಾಯಕರ ನಡುವೆ ವಾಗ್ವಾದಗಳು ಕೂಡ ಜೋರಾಗಿಯೇ ನಡೆಯುತ್ತಿವೆ. ಅದೇ ರೀತಿ ಬುಧವಾರ ರಾತ್ರಿ (ಮೇ 04) ಅರಸೀಕೆರೆ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಪ್ರಚಾರದ ವಿಚಾರಕ್ಕೆ ಕಾಂಗ್ರೆಸ್-ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಿಗ್ಗಾಮುಗ್ಗ ಬಡಿದಾಡಿಕೊಂಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ರಾಜ್ಯದಲ್ಲಿ ಈಗಾಗಲೇ ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಗಳು ಕೂಡ ನಡೆಯುತ್ತಿವೆ. ಹಾಗೆಯೇ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಮಲ್ಲಾಪುರ ಗ್ರಾಮದಲ್ಲಿ ಪ್ರಚಾರದ ವಿಚಾರಕ್ಕೆ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆಯು ನಡೆದಿದೆ. ಈ ವೇಳೆ ಸ್ಥಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡರು ಇದ್ದರು ಎಂದು ತಿಳಿದುಬಂದಿದೆ.

ಹತ್ತು ಗಂಟೆ ಮೇಲೆ ಪ್ರಚಾರಕ್ಕೆ ಅವಕಾಶ ಕೊಟ್ಟಿದ್ದೀರಾ ಎಂದು ಘಟನಾ ಸ್ಥಳಕ್ಕೆ ಆಗಮಿಸಿದ್ದ ಪ್ಲೈಯಿಂಗ್ ಸ್ವಾಡ್ ಅಧಿಕಾರಿಗಳಿಗೂ ಜೆಡಿಎಸ್ ಕಾರ್ಯಕರ್ತರು ತರಾಟಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಅವರು ಅಧಿಕಾರಗಳ ಎದುರೇ ಬಡಿದಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇನ್ನು ಈ ಘಟನೆ ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎನ್ನುವ ಮಾಹಿತಿಯೂ ತಿಳಿದುಬಂದಿದೆ.
ಪ್ರೀತಂ ಗೌಡ ವಿರುದ್ಧ ಭವಾನಿ ಕೆಂಡ
ಇನ್ನು ಮತ್ತೊಂದೆಡೆ ಹೈವೋಲ್ಟೇಜ್ ಕ್ಷೇತ್ರವಾದ ಹಾನಸದಲ್ಲಿ ಕರವೇ ವತಿಯಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಭವಾನಿ ರೇವಣ್ಣ ಪ್ರೀತಂ ಗೌಡ ವಿರುದ್ಧ ಇತ್ತೀಚೆಗಷ್ಟೇ ವಾಗ್ದಾಳಿ ನಡೆಸಿದ್ದರು.
ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ನಾವು ಯಾವಾಗಲೂ ಗೂಂಡಾಗಿರಿ ರಾಜಕಾರಣ ಮಾಡಿದವರಲ್ಲ. ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು, ನಿಮ್ಮನ್ನು ಮತ ಕೇಳುತ್ತೇವೆಯೇ ಹೊರತು, ಬಿಹಾರ್ ಅಂತಹ ರಾಜಕಾರಣವನ್ನು ನಾವು ಮಾಡುವುದಿಲ್ಲ ಎಂದು ಪರೋಕ್ಷವಾಗಿ ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯ್ದಿದ್ದರು.
ಅಲ್ಲದೆ ನೀವೆಲ್ಲ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ಗೆ ಬೆಂಬಲ ಕೊಡುತ್ತೇನೆ ಅಂತಾ ಹೇಳಿದ್ದೀರ. ಒಬ್ಬೊಬ್ಬರು ನೂರು ವೋಟು ಹಾಕಿಸುವ ಶಕ್ತಿ ಇದೆ ಅಂದುಕೊಳ್ಳುತ್ತೇನೆ ಎಂದಿದ್ದರು.












Click it and Unblock the Notifications