ಬಿಜೆಪಿ ಪರ ಜನಾರ್ದನ ರೆಡ್ಡಿ ಪ್ರಚಾರ : ಯಡಿಯೂರಪ್ಪ ಹೇಳಿದ್ದೇನು?
ಹಾಸನ, ಏಪ್ರಿಲ್ 27 : 'ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿಲ್ಲ. ಆದ್ದರಿಂದ, ವಿಧಾನಸಭೆ ಟಿಕೆಟ್ ನೀಡಿಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಹಾಸನದಲ್ಲಿ ಶುಕ್ರವಾರ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನ ರೆಡ್ಡಿ ಸಹಾಯದಿಂದ ಪಕ್ಷ 15 ರಿಂದ 20 ಸೀಟು ಗೆಲ್ಲುತ್ತದೆ' ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
'ನಮಗೆ ಸಹಾಯ ಆಗುವುದಾದದರೆ ವಿರೋಧಿಗಳ ನೆರವನ್ನೂ ಪಡೆಯಿರಿ ಎಂದು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಹೇಳಿದ್ದಾರೆ. ಪಕ್ಷಕ್ಕೆ ಅವರ ನೆರವು ಅನಾಯಾಸವಾಗಿ ಸಿಗುವುದಾದದರೆ ಸಿಗಲಿ ಬಿಡಿ' ಎಂದು ಹೇಳಿದರು.

'ಜನಾರ್ದನ ರೆಡ್ಡಿ ಅವರ ವಿಚಾರದಲ್ಲಿ ಅಮಿತ್ ಶಾ ಅವರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅವರು ಪಕ್ಷಕ್ಕಾಗಿ ಕೆಲಸ ಮಾಡಿದವರು. ಅವರ ನೆರವು ಪಕ್ಷಕ್ಕೆ ಸಿಗುವುದಾದದರೆ ಸಿಗಲಿ ಬಿಡಿ' ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡರು.
ಸೋಲಿನ ಭೀತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ 'ಲೂಟಿಕೋರರು ಎಲ್ಲಾ ಒಂದಾಗಿದ್ದಾರೆ. ಜನಾರ್ದನ ರೆಡ್ಡಿ, ಶ್ರೀರಾಮುಲು, ಕರುಣಾಕರ ರೆಡ್ಡಿ, ಯಡಿಯೂರಪ್ಪ ಅವರೆಲ್ಲಾ 2008ರ ಬಳಿಕ ಒಂದಾಗಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದರು.
ಇಂದು ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಸಿದ್ದರಾಮಯ್ಯ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ಅವರು ಕಾಂಗ್ರೆಸ್ನ ಕೊನೆಯ ಸಿಎಂ ಆಗಲಿದ್ದಾರೆ. ಸೋಲಿನ ಭೀತಿಯಿಂದಾಗಿ ಏನೇನೋ ಮಾತನಾಡುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.
ಜನಾರ್ದನ ರೆಡ್ಡಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷಗಳು ಇದನ್ನೇ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ್ದ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು, 'ಜನಾರ್ದನ ರೆಡ್ಡಿ ನಮ್ಮ ಪಕ್ಷದ ಸ್ಟಾರ್ ಕ್ಯಾಂಪೇನರ್ ಅಲ್ಲ. ಅವರು ಶ್ರೀರಾಮುಲು ವಿರುದ್ಧ ಮಾಡುತ್ತಿರುವ ಪ್ರಚಾರ ಅವರ ವೈಯಕ್ತಿಕ' ಎಂದು ಹೇಳಿದ್ದರು.












Click it and Unblock the Notifications