ಎಂಎಲ್ಸಿ ಸೂರಜ್ ರೇವಣ್ಣಗೆ ಹೈಕೋರ್ಟ್ನಿಂದ ಸಮನ್ಸ್ 'ಸಂಕಷ್ಟ'
ಬೆಂಗಳೂರು ಏ.8. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತಗೊಂಡಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣಗೆ ಹೈಕೋರ್ಟ್ ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ.
ಈ ಹಿಂದೆ ವಕೀಲರ ಮೂಲಕ ಹಾಗೂ ನ್ಯಾಯಾಲಯದ ಮೂಲಕ ಸಮನ್ಸ್ ಜಾರಿಯಾದರೂ ಸಹ ಅದನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯ, ಜಿಲ್ಲಾ ನ್ಯಾಯಾಧೀಶರ ಮೂಲಕ ಸಮನ್ಸ್ ಜಾರಿಗೆ ಆದೇಶಿಸಿದೆ. ಹೀಗಾಗಿ ಈ ಬಾರಿ ಸಮನ್ಸ್ ಅನ್ನು ಸ್ವೀಕರಿಸಲೇಬೇಕಾದ ಅನಿವಾರ್ಯ ಸ್ಥಿತಿ ಸೂರಜ್ ರೇವಣ್ಣಗೆ ಎದುರಾಗಿದೆ.
ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಗ್ರಾಮ ಪಂಚಾಯಿತಿ ಸದಸ್ಯ ಎಲ್. ಹನುಮೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಶುಕ್ರವಾರ ಆಲಿಸಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿ ಸಂಬಂಧ ಈ ಹಿಂದೆಯೇ ಸೂರಜ್ ರೇವಣ್ಣಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಅದರಂತೆ ಅರ್ಜಿಯಲ್ಲಿ ಉಲ್ಲೇಖಿಸಿರುವ ಅವರ ವಿಳಾಸಕ್ಕೆ ನೋಟಿಸ್ ಜಾರಿ ಮಾಡಲಾಗಿತ್ತು. ಸೂರಜ್ ರೇವಣ್ಣ ಚುನಾವಣೆ ವೇಳೆ ಸಲ್ಲಿಸಿದ್ದ ನಾಮಪತ್ರದಲ್ಲಿ ಉಲ್ಲೇಖಿಸಿದ್ದ ವಿಳಾಸವನ್ನೇ ಅರ್ಜಿಯಲ್ಲೂ ತಿಳಿಸಲಾಗಿದೆ.
ಆದರೆ, ಆ ವಿಳಾಸ ಸರಿಯಿಲ್ಲ ಎಂದು ಹೇಳಿ ನೋಟಿಸ್ ಹಿಂದಕ್ಕೆ ಬಂದಿದೆ. ಇದರಿಂದ ಮಾ.11ರಂದು ಹೈಕೋರ್ಟ್ ಮತ್ತೆ ಸಮನ್ಸ್ ಜಾರಿಗೊಳಿಸಿತ್ತು. ಅದೂ ಸಹ ವಿಳಾಸ ಸರಿಯಿಲ್ಲ ಎಂಬ ಕಾರಣಕ್ಕೆ ಹಿಂದಕ್ಕೆ ಬಂದಿದೆ. ಆ ಮೂಲಕ ಅವರಿಗೆ ಈವರೆಗೂ ಸಮನ್ಸ್ ಜಾರಿಯಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಸೂರಜ್ ರೇವಣ್ಣ ಅವರಿಗೆ ಹಾಸನ ಜಿಲ್ಲಾ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಪ್ರತಿವಾದಿ ಸೂರಜ್ ರೇವಣ್ಣ ನೋಟಿಸ್ ಸ್ವೀಕರಿಸುವ ಕಾನೂನು ಪ್ರಕ್ರಿಯೆಗೆ ಸಹಕರಿಸುತ್ತಿಲ್ಲ. ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ, ಸ್ಥಳೀಯ ಜಿಲ್ಲಾ ನ್ಯಾಯಾಧೀಶರ ಮೂಲಕ ನೋಟಿಸ್ ಜಾರಿಗೆ ಆದೇಶಿಸಬೇಕೆಂದು ಕಳೆದ ವಿಚಾರಣೆ ವೇಳೆಯೇ ಕೋರಿದರು.
ಪತ್ನಿ ಆಸ್ತಿ ವಿವರ ನೀಡಿಲ್ಲ; ಸೂರಜ್ ರೇವಣ್ಣ 2017ರ ಮಾರ್ಚ್ 4ರಂದು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಪುತ್ರಿಯನ್ನು ಮದುವೆಯಾಗಿದ್ದರು. ಆದರೆ, ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದ ಅರ್ಜಿ ನಮೂನೆ 26ರಲ್ಲಿ ತಮ್ಮ ಪತ್ನಿಗೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ವಿವರಿಸಿಲ್ಲ' ಎಂಬುದು ಅರ್ಜಿದಾರರ ಆರೋಪಿಸಿದ್ದಾರೆ.
ಪತ್ನಿಗೆ ಸಂಬಂಧಿಸಿದ ವಿವರಗಳನ್ನು ನಮೂದಿಸುವ ಕಾಲಂನಲ್ಲಿ; 'ಅನ್ವಯವಾಗುವುದಿಲ್ಲ' ಎಂದು ತಿಳಿಸಿದ್ದಾರೆ. ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಿಲ್ಲ ಎಂದು ಆಕ್ಷೇಪಿಸಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದು, ಅವರ ಆಯ್ಕೆ ಜನತಾ ಪ್ರತಿನಿಧಿ ಕಾಯ್ದೆ-1951ರ ಕಲಂ 123 (1) (ಎ) (ಬಿ) ಮತ್ತು 123 (2)ಗೆ ವಿರುದ್ಧವಾಗಿದೆ. ಹಾಗಾಗಿ ಅವರ ಆಯ್ಕೆ ಅಸಿಂಧುವೆಂದು ಘೋಷಿಸಬೇಕೆಂದು ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದಾರೆ.












Click it and Unblock the Notifications