ಮರಳಿಗಾಗಿ ಕೊಲೆ: ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಪ್ರಮುಖ ಆರೋಪಿ
ಹಾಸನ, ಆಗಸ್ಟ್ 15: ಮರಳು ಶೇಖರಣೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ನಡೆದ ಸಕಲೇಶಪುರ ಅಜಯ್ ಸತ್ಪಾಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಯಸಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ರಾಹುಲ್ ಕುಮಾರ್ ತಿಳಿಸಿದ್ದಾರೆ.
ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯ ನಿಡುಗೆರೆ ಗ್ರಾಮದಲ್ಲಿ ಮರಳು ಶೇಖರಣೆ ಮತ್ತು ಸಾಗಾಟದ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿನ ನಿವಾಸಿ ಅಜಯ್ ಸತ್ಪಾಲ್ ಎಂಬಾತನನ್ನು ಡಿ.ಸಿ.ಸಣ್ಣಸ್ವಾಮಿ ಎಂಬಾತ ಇತರೆ 15 ಮಂದಿಯೊಂದಿಗೆ ಸೇರಿ ಕೊಲೆ ಮಾಡಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಮಂದಿಯನ್ನು ಬಂಧಿಸಲಾಗಿತ್ತು. ಆದರೆ ಪ್ರಮುಖ ಆರೋಪಿಯಾಗಿದ್ದ ಸಣ್ಣಸ್ವಾಮಿ ತಪ್ಪಿಸಿಕೊಂಡಿದ್ದ.
ಯಸಳೂರು ಪೊಲೀಸ್ ಠಾಣೆ ಪಿಎಸ್ಐ ದಯಾನಂದ್, ಚನ್ನರಾಯಪಟ್ಟಣ ನಗರ ಪಿಎಸ್ಐ ವಿನೋದ್ ರಾಜ್, ಸಿಬ್ಬಂದಿ ಪೀರ್ ಖಾನ್, ಖಾದರ್, ಪ್ರದೀಪ್ ಮತ್ತು ಶಶಿಕುಮಾರ್ ಅವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ಆರೋಪಿ ಸಣ್ಣಸ್ವಾಮಿ ಹಾಸನ ನಗರದ ಬಸ್ ನಿಲ್ದಾಣದಲ್ಲಿರುವ ಖಚಿತ ಮಾಹಿತಿ ತನಿಖಾ ತಂಡಕ್ಕೆ ದೊರೆತು, ಆತನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರು ತಲೆ ಮರೆಸಿಕೊಂಡಿದ್ದು, ಅವರನ್ನು ಶೀಘ್ರವೇ ಬಂಧಿಸುವುದಾಗಿ ಎಸ್ಪಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧಿಕಾರಿ ಶೋಭರಾಣಿ ಇತರರು ಹಾಜರಿದ್ದರು.











Click it and Unblock the Notifications