ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು
ಹಾಸನ, ಆಗಸ್ಟ್ 09: ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ರನ ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ, ಹರಳಹಳ್ಳಿ ಗ್ರಾಮದ ಯೋಗೇಶ್ ಹಾಗೂ ರಾಣಿ ದಂಪತಿಯ ಪುತ್ರ ಕಿರಣ್ (23) ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಬಳಿಕ ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆಯಲ್ಲಿ ಕಿರಣ್ ಅಂಗಾಂಗ ದಾನ ಮಾಡಲಾಗಿದೆ.

ಕಳೆದ 2 ದಿನಗಳ ಹಿಂದೆ ಕಿರಣ್ ನಗರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿರಣ್ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರ ತಿಳಿದ ಕೂಡಲೇ ಪೋಷಕರು ಮಗನ ಅಂಗಾಂಗ ದಾನ ಮಾಡಿದ್ದಾರೆ. ಕಿರಣ್ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದು, ಬುಧವಾರ ಮಧ್ಯಾಹ್ನ ತನ್ನ ಹುಟ್ಟೂರು ಹರಳಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ
ಹಾಸನ: ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.
ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಹಾರ್ಲೆ ಕಾಫಿ ತೋಟಕ್ಕೆ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್ಅಪ್ ವಾಹನ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರನ್ನು ಕರೆದೊಯ್ಯುಲಾಗಿತ್ತು.

ಘಟನೆಯಲ್ಲಿ ಹದಿನೈದುಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗೊಂಡಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications