ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮಕ್ಕೆ ಸಚಿವ ಪ್ರಭು ಚೌಹಾಣ್ ಸೂಚನೆ
ಬೆಂಗಳೂರು, ಫೆ. 27: ಹಾಸನ ಜಿಲ್ಲೆ ಅರಸಿಕೆರೆಯಲ್ಲಿ ನಾಲ್ಕೈದು ಕಸಾಯಿಖಾನೆಗಳು ಅನಧಿಕೃತವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ವಿರುದ್ದ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಸಿಕೆರೆ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಸಂಗ್ರಹ ಮಾಡಿದ ಸುಮಾರು ೧ ಟನ್ ಗೋಮಾಂಸವನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನನ್ನ ಗಮನಕ್ಕೆ ಬಂದಿದೆ ಅಲ್ಲದೇ ಅನಧಿಕೃತವಾಗಿ ಮೂಳೆಗಳ ಸಂಗ್ರಹಣೆ ಮಾಡಿರುವುದು ತಿಳಿದು ಬಂದಿದೆ.
ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಹಾಸನ ಜಿಲ್ಲೆಗೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲ ಗೋಪಾಲಕರು ಈ ವಿಷಯವನ್ನು ಗಮನಕ್ಕೆ ತಂದಿದ್ದರು. ಗೌಗ್ಯಾನ ಫೌಂಡೇಷನ್ ಸ್ವಯಂ ಸೇವಕರ ಸಹಾಯದಿಂದ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿ ಗೋಮಾಂಸ ಮತ್ತು ಮೂಳೆಗಳನ್ನು ವಷಪಡಿಸಿಕೊಂಡಿದ್ದಾರೆ.
ಪಶುಸಂಗೋಪನೆ ಇಲಾಖೆಯ ಆಯುಕ್ತರು ಹಾಗೂ ಉಪನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದ್ದು ಪೊಲೀಸ್ ಇಲಾಖೆ ಸಹಾಯದಿಂದ ಎಲ್ಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.