ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣಗೆ ಸಿಹಿ ಸುದ್ದಿ
Recommended Video
ಹಾಸನ, ಜನವರಿ 31: ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ಜೆಡಿಎಸ್ ನ ಯುವ ಮುಖಂಡ ಪ್ರಜ್ವಲ್ ರೇವಣ್ಣಗೆ ಶುಭ ಸುದ್ದಿ ಸಿಕ್ಕಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸೋತ ಅಭ್ಯರ್ಥಿ ಬಿಜೆಪಿಯ ಅರಕಲಗೂಡು ಮಂಜು ಅವರು ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿದೆ.
ಇದಲ್ಲದೆ, ವಕೀಲ ಜಿ.ದೇವರಾಜೇಗೌಡ ಅವರು ಕೂಡಾ ಪ್ರತ್ಯೇಕವಾಗಿ ದೂರು ದಾಖಲಿಸಿದ್ದರು. ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಅರ್ಜಿಯನ್ನು ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕರಿಸಲಾಗಿದೆ ಎಂದು ಆದೇಶಿಸಿದೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎ.ಮಂಜು ವಿರುದ್ಧ 1.40 ಲಕ್ಷ ಮತಗಳ ಅಂತರದ ಗೆಲುವು ಸಾಧಿಸುವ ಮೂಲಕ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸಂಸತ್ ಪ್ರವೇಶಿಸಿದ್ದಾರೆ. ಲೋಕಸಭೆಗೆ ಪ್ರವೇಶಿಸುತ್ತಿರುವ ಅತಿ ಕಿರಿಯ ಸಂಸದರಲ್ಲಿ ಪ್ರಜ್ವಲ್ ಕೂಡ ಒಬ್ಬರು.

ಪ್ರಜ್ವಲ್ ರೇವಣ್ಣ ವಿರುದ್ಧ ಇದ್ದ ಆರೋಪವೇನು?
"ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. ಹಲವು ಕಂಪೆನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಅದನ್ನು ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ. ಸುಮಾರು 6 ಕೋಟಿ ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ. ಈ ಬಗ್ಗೆ ಈ ಮುಂಚೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿತ್ತು" ಎಂದು ಮಂಜು ಹಾಗೂ ವಕೀಲ ದೇವರಾಜು ಆರೋಪಿಸಿದ್ದರು.
ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯಕ್ಕೂ ದೂರು ಸಲ್ಲಿಸಿ ತನಿಖೆಗೆ ಆಗ್ರಹಿಸಿದ್ದರು. ಅಂದಿನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಕೂಡಾ ಇದು ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತವಾದ ಪ್ರಕರಣ ಎಂದು ವರದಿ ನೀಡಿದ್ದರು. ನಂತರ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು.

ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಸಂಸದ ಪ್ರಜ್ವಲ್ ರೇವಣ್ಣ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕಿದ್ದ ಕಂಟಕ ದೂರಾಗಿದೆ. ವಕೀಲ ದೇವರಾಜ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಕೋರಿದ್ದ ದೇವರಾಜ್, ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕಚೇರಿ ಅರ್ಜಿಯಲ್ಲಿ ಹಲವು ಲೋಪದೋಷ ತೋರಿಸಿತ್ತು. ಆದರೆ, ಕಾಲಮಿತಿಯಲ್ಲಿ ಕಚೇರಿ ಆಕ್ಷೇಪಣೆ ಸರಿಪಡಿಸಿರಲಿಲ್ಲ. ಈ ಬಗ್ಗೆ ಪ್ರಜ್ವಲ್ ಪರ ವಕೀಲ ಕೇಶವ ರೆಡ್ಡಿ ವಾದಿಸಿ ತಕರಾರು ಅರ್ಜಿ ಕ್ರಮಬದ್ದವಾಗಿಲ್ಲವೆಂದು ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿ ನ್ಯಾ.ಜಾನ್ ಮೈಕಲ್ ಕುನ್ಹಾ ರವರ ಪೀಠ ಮಹತ್ವದ ಆದೇಶ ನೀಡಿದೆ. ಈ ಹಿಂದೆ ಎ ಮಂಜು ಅರ್ಜಿ ಕೂಡಾ ವಜಾಗೊಂಡಿತ್ತು.

ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ
ಹೊಳೆನರಸೀಪುರದಲ್ಲಿರುವ ಚೆನ್ನಕಾಂಬ ಕನ್ವೆನ್ಶನ್ ಹಾಲ್ಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆಯೋಗಕ್ಕೆ ನೀಡಿರುವ ಮಾಹಿತಿಯಲ್ಲಿ ವಾಣಿಜ್ಯ ಕಟ್ಟಡಗಳನ್ನು ತಾವು ಹೊಂದಿಲ್ಲವೆಂದು ರೇವಣ್ಣ ಹೇಳಿದ್ದಾರೆ. ಆದರೆ ಚೆನ್ನಕಾಂಬಾ ಕನ್ವೆನ್ಶನ್ ಹಾಲ್ ರೇವಣ್ಣ ಅವರದ್ದೇ ಆಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ದೇವೇಗೌಡ ಅವರ ನಾಮಪತ್ರದಲ್ಲಿ ಪ್ರಜ್ವಲ್ ರೇವಣ್ಣಗೆ 23 ಲಕ್ಷ ಕೊಟ್ಟಿರುವುದಾಗಿ ನಮೂದು ಮಾಡಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ನಾಮಪತ್ರದಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖಗಳು ಇಲ್ಲ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆರೋಪ ಸಾಬೀತಾಗಿದ್ದರೆ ಮಂಜು ಸಂಸದರಾಗುತ್ತಿದ್ದರು
ಪ್ರಜಾಪ್ರತಿನಿಧಿ ಕಾಯ್ದೆ 125ಎ ಮತ್ತು 1951ರ ಅಡಿ ಕ್ರಮ ತೆಗೆದುಕೊಂಡರೆ ಪ್ರಜ್ವಲ್ ರೇವಣ್ಣ ಅವರಿಗೆ ಚುನಾವಣಾ ಆಯೋಗ ದಂಡ ವಿಧಿಸಬಹುದು. ಅಥವಾ ಅವರನ್ನು ಆರು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬಹುದು. ಮಿಗಿಲಾಗಿ ಇಷ್ಟು ದೊಡ್ಡ ಅಂತರದಿಂದ ಗೆದ್ದಿದ್ದರೂ ಪ್ರಜ್ವಲ್ ರೇವಣ್ಣ ತಮ್ಮ ಸಂಸದ ಸ್ಥಾನ ಕಳೆದುಕೊಳ್ಳಬಹುದಾಗಿತ್ತು. ಇದರಿಂದ ಇಡೀ ರಾಜ್ಯದಲ್ಲಿ ಜೆಡಿಎಸ್ ಸಾಧನೆ 'ಶೂನ್ಯ'ವಾಗುತ್ತದೆ. ಚುನಾವಣೆಯಲ್ಲಿ ಎರಡನೆಯ ಸ್ಥಾನ ಪಡೆದ ಎ. ಮಂಜು ಅವರು ಸಂಸದರಾಗುವ ಅರ್ಹತೆ ಪಡೆದುಕೊಳ್ಳುತ್ತಾರೆ.












Click it and Unblock the Notifications