ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತೆ ನಿಯುಕ್ತಿ
Recommended Video

ಬೆಂಗಳೂರು, ಜೂನ್ 25: ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೊಮ್ಮೆ ನಿಯುಕ್ತಿಗೊಳಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.
ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿದೆ. ಕೋರ್ಟ್ ಆದೇಶದಂತೆ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ಆದೇಶ ಹೊರಡಿಸಿದೆ.
ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಣಿಯವರನ್ನು ವರ್ಗಾವಣೆ ಮಾಡಿ, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರದ ಆದೇಶ ನೀಡಿತ್ತು.

ಕಾಂಗ್ರೆಸ್ ಸರ್ಕಾರವಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ರಾಜ್ಯ ಪಶುಸಂಗೋಪನಾ ಸಚಿವ ಎ. ಮಂಜು ನಡುವಣ ವಾಕ್ಸಮರ ನಂತರ ಅವರನ್ನು ಹಾಸನದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.
ರೋಹಿಣಿ ಸಿಂಧೂರಿ ಜೆಡಿಎಸ್ ನಾಯಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂಬುದು ಎ. ಮಂಜು ಅವರ ನಿರಂತರ ಆರೋಪವಾಗಿತ್ತು. ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ ರೋಹಿಣಿ ಸಿಂಧೂರಿಯವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.
ರೋಹಿಣಿ ಸಿಂಧೂರಿ ಅವರು 2017ರ ಜುಲೈ 14ರಂದು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು. ಅವಧಿಗೂ ಮೊದಲೇ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶವನ್ನು ಅವರು ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ಆದರೆ, ಸಿಎಟಿ ವರ್ಗಾವಣೆ ಆದೇಶವನ್ನು ಎತ್ತಿಹಿಡಿದಿತ್ತು.
ಈ ಆದೇಶವನ್ನು ಕೆಎಟಿ (ಕರ್ನಾಟಕ ಆಡಳಿತ ನ್ಯಾಯ ಮಂಡಳಿ) ಎತ್ತಿ ಹಿಡಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿಣಿಯಾಗಿರುವ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರ ವಿಚಾರಣೆಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.












Click it and Unblock the Notifications