ಹಾಸನ: ಭಾರೀ ಮಳೆಗೆ ಶಾಲೆ ಗೋಡೆ ಕುಸಿತ, ಶಿಥಿಲಗೊಂಡ ಕಟ್ಟಡದ ಬಳಿಯೇ ವಿದ್ಯಾರ್ಥಿಗಳಿಗೆ ಪಾಠ
ಹಾಸನ, ಜುಲೈ 27: ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಶಾಲೆ ಗೋಡೆ ಕುಸಿದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉಲಿವಾಲ ಗ್ರಾಮದಲ್ಲಿ ನಡೆದಿದೆ. ಉಲಿವಾಲ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದು ಬಿದ್ದಿದ್ದೆ, ತಡರಾತ್ರಿಯಲ್ಲಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಉಲಿವಾಲ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಹೀಗಾಗಿ ನೂತನ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಹಣ ಸಂದಾಯ ಮಾಡದ ಹಿನ್ನಲೆಯಲ್ಲಿ ಗುತ್ತಿಗೆದಾರ ನೂತನ ಕಟ್ಟಡಕ್ಕೆ ಬೀಗ ಜಡಿದಿದ್ದಾರೆ. ಇದರಿಂದಾಗಿ ಹಳೆಯ ಕಟ್ಟಡದಲ್ಲೇ ಪಾಠ ಪ್ರವಚನ ನಡೆಯುತ್ತಿತ್ತು. ಆದರೆ ಸದ್ಯ ಭಾರೀ ಮಳೆಗೆ ಶಾಲೆ ಗೋಡೆ ಕುಸಿದಿದೆ.

ಅತ್ತ ನೂತನ ಕಟ್ಟಡ ಇತ್ತ ಹಳೆಯ ಕಟ್ಟಡವೂ ಇರದೇ ಇದೀಗ ಶಿಕ್ಷಕರು ಶಾಲೆಯ ಜಗ್ಗಲಿಯಲ್ಲಿಯೇ ಪಾಠ ಮಾಡುತ್ತಿದ್ದು, ಮಳೆಯ ನಡುವೆಯೇ ಹೊರಗೆ ಕುಳಿತು ಬುಧವಾರ ವಿದ್ಯಾರ್ಥಿಗಳು ಪಾಠ ಕೇಳಿದ್ದಾರೆ. ಹೀಗಾಗಿ ಯಾವುದೇ ಅನಾಹುತ ಸಂಭವುಸುವ ಮುನ್ನ ನೂತನ ಕಟ್ಟಡಕ್ಕೆ ಶಾಲೆ ಸ್ಥಳಾಂತರ ಮಾಡುವಂತೆ ಪೋಷಕರು ಒತ್ತಾಯಿಸಿದ್ದಾರೆ. ಹೀಗಾಗಿ ಹೊಳೆನರಸೀಪುರ ತಾಲೂಕಿನ ಉಲಿವಾಲ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಎಚ್ಛೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಚಿಕ್ಕಮಗಳೂರಿನಲ್ಲಿ ವರುಣಾರ್ಭಟ: ಮನೆಗಳು ನೆಲಸಮ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕಾಫಿನಾಡಿನಲ್ಲಿ ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಮನೆ ಕುಸಿದಿದೆ. ತಳವಾರ ಗ್ರಾಮದ ಮಂಜುಳಾ ಎನ್ನುವವರಿಗೆ ಸೇರಿದ ಮನೆ ಗಾಳಿ ಮಳೆ ಆರ್ಭಟಕ್ಕೆ ಏಕಾಏಕಿ ಕುಸಿದು ಬಿದ್ದಿದೆ.
ನೋಡನೋಡುತ್ತಿದ್ದಂತೆ ಮನೆ ನೆಲಸಮವಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಯಲ್ಲಿರುವ ವಸ್ತುಗಳಿಗೆ ಹಾನಿಯಾಗಿದ್ದು, ದವಸ ಧಾನ್ಯಗಳು ಸಂಪೂರ್ಣ ಮಣ್ಣುಪಾಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆ ಮನೆ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದು, ರಾಜ್ಯ ಸರ್ಕಾರ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ.

ಇನ್ನು ಜಿಲ್ಲೆಯ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಮನೆ ಕುಸಿದು ಬಿದ್ದಿದೆ. ತುಡುಕೂರು ಗ್ರಾಮದ ರುದ್ರಯ್ಯ ಎನ್ನುವವರಿಗೆ ಸೇರಿದ ಮನೆ ಸಂಪೂರ್ಣ ನೆಲಸಮವಾಗಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications