ಕಾಂಕ್ರೀಟ್ ರಸ್ತೆ ಕಾಮಗಾರಿ, ನವೆಂಬರ್ನಲ್ಲಿ ಶಿರಾಡಿ ಬಂದ್
ಹಾಸನ, ಅಕ್ಟೋಬರ್ 09 : ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 2ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನವೆಂಬರ್ನಲ್ಲಿ ಆರಂಭವಾಗುವ ನಿರೀಕ್ಷೆ ಇದೆ. 12.38ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.37 ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ಕಾಮಗಾರಿ ನಡೆಯುವ ಸಂದರ್ಭದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ.
ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ : ಚಿತ್ರಗಳು
ಮಳೆಯಿಂದಾಗಿ ಸದಾ ಹಾಳಾಗುವ ಶಿರಾಡಿ ಘಾಟ್ ರಸ್ತೆಯನ್ನು ಎರಡು ಹಂತದಲ್ಲಿ ಅಭಿವೃದ್ಧಿ ಮಾಡಲು ಲೋಕೋಪಯೋಗಿ ಇಲಾಖೆ ಯೋಜನೆ ರೂಪಿಸಿತ್ತು. 13.62 ಕಿ.ಮೀ. ಉದ್ದದ ರಸ್ತೆಯನ್ನು 2015ರಲ್ಲಿ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿತ್ತು.
ಶಿರಾಡಿ ಘಾಟ್ 2ನೇ ಹಂತದ ಕಾಮಗಾರಿ ಟೆಂಡರ್ ರದ್ದು
12.37 ಕಿ.ಮೀ.ರಸ್ತೆಯನ್ನು ಅಭಿವೃದ್ಧಿಪಡಿಸಲು ಕಳೆದ ವರ್ಷ ಜಿ.ವಿ.ಆರ್.ಇನ್ ಫ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಡೆಟ್ ಕಂಪನಿಗೆ ನೀಡಿದ್ದ ಗುತ್ತಿಗೆ ರದ್ದಾಗಿತ್ತು. ಸಕಾಲಕ್ಕೆ ಕಾಮಗಾರಿ ಆರಂಭಿಸಿಲ್ಲ ಎಂದು ಇಲಾಖೆ ಟೆಂಡರ್ ರದ್ದು ಮಾಡಿತ್ತು. ಕಾನೂನು ಹೋರಾಟದಲ್ಲಿಯೂ ಇಲಾಖೆ ಪರವಾಗಿ ತೀರ್ಪು ಬಂದಿತ್ತು. ಈಗ ಹೊಸ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ನಿರ್ಧರಿಸಲಾಗಿದೆ.
ಅನುಮೋದನೆ ಮಾತ್ರ ಬಾಕಿ
12.37 ಕಿ.ಮೀ.ರಸ್ತೆಯನ್ನು ಅಭಿವೃದ್ಧಿಪಡಿಸಲು ಕರೆದಿರುವ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಕೇಂದ್ರ ಭೂ ಸಾರಿಗೆ ಸಚಿವಾಲಯದಿಂದ ಆರ್ಥಿಕ ಅನುಮೋದನೆ ದೊರೆಯಬೇಕಿದೆ. ನವೆಂಬರ್ನಲ್ಲಿ ಕಾಮಗಾರಿ ಆರಂಭಿಸಲು ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆ ನಡೆಸಿದೆ.
ಎರಡು ಜಿಲ್ಲೆಗಳಲ್ಲಿ ಕಾಮಗಾರಿ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.38 ಕಿ.ಮೀ. ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಹಾಸನ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಲ್ಲಿ ಕಾಮಗಾರಿ ನಡೆಯಲಿದೆ.
ಮಳೆ ಕಾಮಗಾರಿಗೆ ಅಡ್ಡಿ ಆಗುವುದಿಲ್ಲ
ಕಾಮಗಾರಿ ಆರಂಭಿಸುವ ಮುನ್ನ ಮರಳು, ಜಲ್ಲಿ, ಸಿಮೆಂಟ್ ಮುಂತಾದ ವಸ್ತುಗಳನ್ನು ದಾಸ್ತಾನು ಮಾಡಿಕೊಳ್ಳಲಾಗುತ್ತದೆ. ನಂತರ ನವೆಂಬರ್ನಲ್ಲಿ ಕಾಮಗಾರಿ ಆರಂಭಿಸಿ ಏಪ್ರಿಲ್ ತಿಂಗಳಿನಲ್ಲಿ ಪೂರ್ಣಗೊಳಿಸಲಾಗುತ್ತದೆ. ನವೆಂಬರ್ನಲ್ಲಿ ಕಾಮಗಾರಿ ಆರಂಭಿಸುವುದರಿಂದ ಮಳೆ ಅಡ್ಡಿಯಾಗುವುದಿಲ್ಲ.
ವಾಹನ ಸಂಚಾರ ಬಂದ್
ಕಾಂಕ್ರೀಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುತ್ತದೆ. 2015ರಲ್ಲಿ 13.62 ಕಿ.ಮೀ.ಕಾಂಕ್ರೀಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿಯೂ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಆಗ ಏಳು ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.