ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ದಿನಾಂಕ ನಿಗದಿ
ಬೆಂಗಳೂರು, ಜೂನ್ 20 : ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆ ಜುಲೈನಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. 2018ರ ಜನವರಿ 20ರಿಂದ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈ ಕುರಿತು ಮಾಹಿತಿ ನೀಡಿದ್ದಾರೆ. ರೇವಣ್ಣ ಅವರು ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜುಲೈ 5ರಿಂದ ಶಿರಾಡಿ ಘಾಟ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.
ಜನವರಿ 2ನೇ ವಾರದಿಂದ 5 ತಿಂಗಳು ಶಿರಾಡಿ ಘಾಟ್ ರಸ್ತೆ ಬಂದ್
ಶಿರಾಡಿಘಾಟ್ನ 12.38 ಕಿ.ಮೀ. ಉದ್ದದ ರಸ್ತೆಯನ್ನು 74 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಆದ್ದರಿಂದ, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಶಿರಾಡಿಯಲ್ಲಿ ವಾಹನ ಸಂಚಾರ ಬಂದ್ ಆಗಿರುವ ಪರಿಣಾಮ ಚಾರ್ಮಾಡಿ ಸೇರಿದಂತೆ ಅನೇಕ ಪರ್ಯಾಯ ಮಾರ್ಗಗಳನ್ನು ವಾಹನ ಸವಾರರು ಬಳಸುತ್ತಿದ್ದಾರೆ. ಆದರೆ, ಎರಡು ವಾರದ ಹಿಂದೆ ಭಾರೀ ಮಳೆಯಿಂದಾಗಿ ಚಾರ್ಮಾಡಿ ಸಹ ಬಂದ್ ಆಗಿ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸಿದ್ದರು.
ಓಷನ್ ಕನ್ಸ್ಟ್ರಕ್ಷನ್ ಕಂಪನಿ ಕಾಂಕ್ರಿಟ್ ರಸ್ತೆ ಕಾಮಗಾರಿ ಕೈಗೊಂಡಿದೆ. ಅಕಾಲಿಕವಾಗಿ ಮಳೆ ಸುರಿದ ಮಳೆ ಕಾರಣ ಕಾಮಗಾರಿ ವಿಳಂಬವಾಗಿದೆ. ಆದ್ದರಿಂದ, ಜೂನ್ 20ರೊಳಗೆ ಮುಗಿಯಬೇಕಿದ್ದ ಕಾಮಗಾರಿ ಜುಲೈ 5ರ ತನಕ ಸಾಗಿದೆ.