Siddaramaiah: ಹಾಸನದಲ್ಲಿ ಡಿಸೆಂಬರ್ 5ರಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ
ಹಾಸನ, ನವೆಂಬರ್ 24: ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಘೋಷಣೆಯಾಗಿ ಮೂರು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮವಿಶ್ವಾಸವೂ ಹೆಚ್ಚಿದ್ದು, ಅವರು ಶಕ್ತಿ ಪ್ರದರ್ಶನ ಮಾಡಲು ಬೃಹತ್ ಸಮಾವೇಶವನ್ನು ನಡೆಸಲು ಮುಂದಾಗಿದ್ದಾರೆ. ಪಕ್ಷ, ಸರ್ಕಾರದಿಂದಲ್ಲ ಸಿದ್ದರಾಮಯ್ಯ ಅಭಿಮಾನಿಗಳ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲು ತಯಾರಿ ನಡೆಸಲಾಗುತ್ತಿದೆ. ಈ ಸಮಾವೇಶ ಹಾಸನದಲ್ಲಿ ಡಿಸೆಂಬರ್ 5ರಂದು ನಡೆಯಲಿದೆ.
ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಲು ಬೃಹತ್ ಸಮಾವೇಶವನ್ನು ನಡೆಸಲಿದ್ದಾರೆ. ಉಪ ಚುನಾವಣೆ ಫಲಿತಾಂಶ ಸಿದ್ದರಾಮಯ್ಯ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದ್ದು, ಸಮಾವೇಶವನ್ನು ನಡೆಸಲಿದ್ದಾರೆ. ಆದರೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ.

ಹಾಸನದಲ್ಲಿ ಬೃಹತ್ ಸಮಾವೇಶ: ಸಿದ್ದರಾಮಯ್ಯ ಅಭಿಮಾನಿಗಳ ಹೆಸರಿನಲ್ಲಿ ಹಾಸನದಲ್ಲಿ ಡಿಸೆಂಬರ್ 5ರಂದು ಬೃಹತ್ ಸಮಾವೇಶವನ್ನು ನಡೆಸಲಾಗುತ್ತದೆ. ಸಿದ್ದರಾಮಯ್ಯ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಮಾವೇಶದ ಸಿದ್ಧತೆ ಕುರಿತು ಕೆಲವು ಸಚಿವರ ಜೊತೆ ಈಗಾಗಲೇ ಸಭೆಯನ್ನು ನಡೆಸಿದ್ದಾರೆ.
ಮಾಹಿತಿಗಳ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದ ನಾಲ್ವರು ಸಚಿವರು, ಪುತ್ರ ಯತೀಂದ್ರ ಸೇರಿ ಹಲವು ಕಾಂಗ್ರೆಸ್ ನಾಯಕರು ಜಂಟಿಯಾಗಿ ಸಭೆ ನಡೆಸಿ 'ಸ್ವಾಭಿಮಾನಿ ಸಮಾವೇಶ' ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈ ಶಕ್ತಿ ಪ್ರದರ್ಶನದ ಮೂಲಕ ಯಾವ ಸಂದೇಶ ನೀಡಲು ಹೊರಟಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಈ ಸಮಾವೇಶ ಹಾಸನದಲ್ಲಿ ನಡೆಯಲಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಜನರನ್ನು ಸೇರಿಸಿ ಈ ಬೃಹತ್ ಸಮಾವೇಶವನ್ನು ನಡೆಸುವುದಾಗಿ ತೀರ್ಮಾನ ಮಾಡಲಾಗಿದ್ದು, ವಿವಿಧ ಸಚಿವರನ್ನು ಸಹ ಆಹ್ವಾನಿಸಲಾಗುತ್ತದೆ.
ಲೋಕಸಭೆ ಚುನಾವಣೆಯಲ್ಲಿ ಹಾಸನದಲ್ಲಿ ಗೆಲ್ಲುವ ಮೂಲಕ ಜೆಡಿಎಸ್ ಭದ್ರಕೋಟೆಯನ್ನು ಕಾಂಗ್ರೆಸ್ ವಶಕ್ಕೆ ಪಡೆದುಕೊಂಡಿದೆ. ಈಗ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಮಾಹಿತಿಗಳ ಪ್ರಕಾರ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಕೆ. ಎನ್. ರಾಜಣ್ಣ, ವೆಂಕಟೇಶ್, ಬೋಸರಾಜು, ಶಾಸಕರಾದ ಶಿವಲಿಂಗೇಗೌಡ, ಹಾಸನ ಸಂಸದ ಶ್ರೇಯಸ್ ಪಟೇಲ್, ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ.
ಈಗಾಗಲೇ ದಾವಣಗೆರೆ, ಮೈಸೂರಿನಲ್ಲಿ ಸಿದ್ದರಾಮಯ್ಯ ಬೃಹತ್ ಸಮಾವೇಶವನ್ನು ನಡೆಸಿದ್ದರು. ಈಗ ಅದಕ್ಕಿಂತಲೂ ಹೆಚ್ಚಿನ ಜನರನ್ನು ಸೇರಿಸಿ ಹಾಸನದಲ್ಲಿ ಸಮಾವೇಶ ನಡೆಸಲಾಗುತ್ತದೆ. ಉಪ ಚುನಾವಣೆ ಪ್ರಚಾರದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಿದ್ದರಾಮಯ್ಯ ವಿರುದ್ಧ ಮಾಡಿದ್ದ ಆರೋಪಗಳಿಗೆ ಹಾಸನದಲ್ಲಿ ಸಮಾವೇಶದ ನಡೆಸುವ ಮೂಲಕ ತಿರುಗೇಟು ನೀಡಲಾಗುತ್ತದೆ.
ಸಚಿವ ಡಾ. ಎಚ್. ಸಿ. ಮಹದೇವಪ್ಪ ಮಾತನಾಡಿ, "ಇದು ಸರ್ಕಾರದ ಕಾರ್ಯಕ್ರಮ ಅಲ್ಲ, ಪಕ್ಷದ ಕಾರ್ಯಕ್ರಮವೂ ಅಲ್ಲ. ಸಿದ್ದರಾಮಯ್ಯ ಅವರ ಅಭಿಮಾನಿಗಳು ಬಂದು ಕೇಳಿಕೊಂಡರು. ಹಾಗಾಗಿ ನಾವು ಅವರಿಗೆ ಸಹಾಯ ಮಾಡುತ್ತೇವೆ" ಎಂದು ಸಮಾವೇಶದ ಕುರಿತು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಬೃಹತ್ ಹೋರಾಟ ನಡೆಸಿದ್ದವು. ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆ ನಡೆಸಲಾಗಿತ್ತು. ಆಗ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶ ಆಯೋಜನೆ ಮಾಡಿ ಸಿದ್ದರಾಮಯ್ಯ ಪರ ನಾವಿದ್ದೇವೆ ಎಂಬ ಸಂದೇಶ ಸಾರಲಾಗಿತ್ತು. ಈಗ ಹಾಸನದಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗುತ್ತದೆ.












Click it and Unblock the Notifications