ಹಾಸನ : ಐಎಂಎ ಗ್ರೂಪ್ಗೆ ಸೇರಿದ ಸೈಟು ಸರ್ಕಾರದ ವಶಕ್ಕೆ
ಹಾಸನ, ಜುಲೈ 29 : ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿದ್ದ ಐಎಂಎ ಸಮೂಹ ಸಂಸ್ಥೆಗೆ ಸೇರಿದ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ಇಡಿ ವಶದಲ್ಲಿದ್ದಾನೆ.
ನಗರದ ತಣ್ಣೀರುಹಳ್ಳದಲ್ಲಿರುವ ಐಎಂಎ ಸಂಸ್ಥೆಗೆ ಸೇರಿದ್ದ ಖಾಲಿ ನಿವೇಶನವನ್ನು ಸರ್ಕಾರದ ರಾಜ್ಯ ಪತ್ರದಲ್ಲಿ ಆಧಿಸೂಚಿಸಿರುವ ಆದೇಶದಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ವಶಪಡಿಸಿಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದರು.
ಹಾಸನ ನಗರಸಭೆ ವ್ಯಾಪ್ತಿಯ ತಣ್ಣೀರುಹಳ್ಳದ ಖಾತೆ ಸಂಖ್ಯೆ 33/03/13/353/ಎ ರಲ್ಲಿನ 22 ಸಾವಿರ ಚದರ ಅಡಿ ಖಾಲಿ ನಿವೇಶನವನ್ನು ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ 2004 ಕಲಂ 3(3) ಅ ಅನ್ವಯ ಜಪ್ತಿ ಮಾಡಲಾಗಿದೆ.

ಜಿಲ್ಲಾಧಿಕಾರಿ ಅಕ್ರಂ ಪಾಷ ಸೋಮವಾರ ಅಧಿಕೃತವಾಗಿ ಸಾರ್ವಜನಿಕರ ಸಮಕ್ಷಮದಲ್ಲಿ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆದು, ಸಕ್ಷಮ ಪ್ರಾಧಿಕಾರವಾಗಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ವರದಿ ನೀಡಿದರು.
ಹಾಸನ ನಗರಸಭೆ ಆಯುಕ್ತ ಪರಮೇಶ್ವರ್, ಉಪ ವಿಭಾಗಾಧಿಕಾರಿ ಡಾ. ಎಚ್.ಎಲ್. ನಾಗರಾಜ್, ವಿಶೇಷ ಭೂಸ್ವಾಧಿನಾಧಿಕಾರಿ ಶ್ರೀನಿವಾಸ್ ಗೌಡ, ತಹಸೀಲ್ದಾರ್ ಮೇಘನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಮೂಹ ಸಂಸ್ಥೆಗಳಿಗೆ ಸೇರಿದ ಜಮೀನು, ಆಸ್ತಿಗಳನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.
ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ದುಬೈನಿಂದ ಜುಲೈ 19ರಂದು ರಾಜ್ಯಕ್ಕೆ ಆಗಮಿಸಿದ್ದು, ಇಡಿ ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.
ಕರ್ನಾಟಕ ಸರ್ಕಾರ ಐಎಂಎ ಹಗರಣದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಮನ್ಸೂರ್ ಖಾನ್ನನ್ನು ಎಸ್ಐಟಿ ವಶಕ್ಕೆ ಪಡೆದು ಶೀಘ್ರದಲ್ಲಿಯೇ ವಿಚಾರಣೆ ನಡೆಸಲಿದೆ.












Click it and Unblock the Notifications