ದಟ್ಟ ಮಂಜು ತಂದ ಆಪತ್ತು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಹಾಸನ, ಫೆಬ್ರವರಿ 01: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಪ್ರದೀಪ್(30) ಹಾಗೂ ಗುರು(25) ಮೃತ ದುರ್ದೈವಿಗಳು.
ಮೃತ ಪ್ರದೀಪ್ ಹಾಗೂ ಗುರು ಜೊತೆಗೆ ಸ್ನೇಹಿತರು ಹೋಟೆಲ್ವೊಂದರ ಪೂಜೆಗೆ ಹೊರಟಿದ್ದರು. ಈ ವೇಳೆ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೈರ್ ಪಂಚರ್ ಆಗಿದ್ದ ಲಾರಿ ನಿಂತಿದ್ದು, ರಿಪೇರಿ ಕೆಲಸ ನಡೆಯುತ್ತಿತ್ತು. ಮುಂಜಾನೆ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿತ್ತು. ಇದೇ ಮಾರ್ಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ.

ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರದೀಪ್ ಹಾಗೂ ಗುರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪಳ ಕೆಎಸ್ಆರ್ಟಿಸಿ ಬಸ್ ಅಪಘಾತ: ತಪ್ಪಿದ ಭಾರೀ ಅನಾಹುತ
ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಕೊಪ್ಪಳ ತಾಲೂಕಿನ ಶಹಾಪುರ ರಾಷ್ಟ್ರೀಯ ಹೆದ್ದಾರಿಯ ಟೋಲ್ ಬಳಿ ನಡೆದಿದೆ. ಬಿಜಾಪುರದಿಂದ ಹೊಸಪೇಟೆಗೆ ತೆರಳುತ್ತಿದ್ದ ಬಸ್ ನಡು ರಸ್ತೆಯಲ್ಲಿ ನಿಂತಿದ್ದ ವಿಂಡ್ ಪವರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕ ಲಾರಿಯನ್ನು ರಸ್ತೆಯ ಮಧ್ಯೆದಲ್ಲಿ ನಿಲ್ಲಿಸಿದ್ದು, ಅದೇ ಮಾರ್ಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ನಲ್ಲಿದ್ದ 65 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅಪಘಾತ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications