ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ, ಇಬ್ಬರು ಶಾಸಕರು ಗೈರು!
Recommended Video

ಹಾಸನ, ಸೆಪ್ಟೆಂಬರ್ 23 : 'ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಎಲ್ಲರೂ ಸಭೆಯಲ್ಲಿ ಭಾಗಿಯಾಗುವ ಮೂಲಕ ಸರ್ಕಾರ ಸುಭದ್ರವಾಗಿದೆ ಎಂಬುದನ್ನು ತೋರಿಸಿದ್ದಾರೆ' ಎಂದು ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.
ಹಾಸನದ ಹೊಯ್ಸಳ ವಿಲೇಜ್ ರೆಸಾರ್ಟ್ನಲ್ಲಿ ಶನಿವಾರ ರಾತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಕ್ಷದ 37 ಶಾಸಕರ ಪೈಕಿ 35 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿ ಶಂಕರ್ ಮತ್ತು ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಅವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ತುರ್ತು ಕೆಲಸದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರ ಒಪ್ಪಿಗೆ ಪಡೆದಿದ್ದರು.
ಜೆಡಿಎಸ್ನ ಕೆಲವು ಶಾಸಕರು ಪಕ್ಷ ತ್ಯಜಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಆದ್ದರಿಂದ, ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ನಿರಾಳರಾಗಿದ್ದಾರೆ.

ಸರ್ಕಾರ ಭದ್ರವಾಗಿದೆ
ಸಭೆಯ ಬಳಿಕ ಮಾತನಾಡಿದ ಸಚಿವ ಬಂಡೆಪ್ಪ ಕಾಶೆಂಪುರ ಅವರು, 'ಇಂದಿನ ಶಾಸಕಾಂಗ ಸಭೆಯಲ್ಲಿ 35 ಶಾಸಕರು ಭಾಗಿಯಾಗಿದ್ದಾರೆ. ಇದನ್ನು ನೋಡಿದರೆ ಸರ್ಕಾರ ಸುಭದ್ರವಾಗಿದೆ ಎಂಬುದು ತಿಳಿಯುತ್ತದೆ. ಆಪರೇಷನ್ ಕಮಲಕ್ಕೆ ಪ್ರಯತ್ನ ನಡೆಸಿದವರಿಗೆ ಹಿನ್ನಡೆ ಉಂಟಾಗಿದೆ' ಎಂದು ಹೇಳಿದರು.

ಇಬ್ಬರು ಶಾಸಕರ ಗೈರು
'ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿ ಶಂಕರ್ ಮತ್ತು ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ. ತುರ್ತು ಕೆಲಸದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರ ಒಪ್ಪಿಗೆ ಪಡೆದು ಹೋಗಿದ್ದಾರೆ. ಆದ್ದರಿಂದ ಸಭೆಯಲ್ಲಿ ಪಾಲ್ಗೊಂಡಿಲ್ಲ' ಎಂದು ಬಂಡೆಪ್ಪ ಕಾಶೆಂಪುರ ಹೇಳಿದರು.

ಪಕ್ಷ ಸಂಘಟನೆ ಬಗ್ಗೆ ಚರ್ಚೆ
ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ದೇವೇಗೌಡ ಮತ್ತು ಎಚ್.ವಿಶ್ವನಾಥ್ ಅವರು ಪಕ್ಷ ಸಂಘಟನೆ ಬಗ್ಗೆ ಹಲವು ಸೂಚನೆಗಳನ್ನು ನೀಡಿದರು. ಜಿಲ್ಲವಾರು ಪಕ್ಷ ಸಂಘಟನೆ ಕುರಿತು ಶಾಸಕರು ಸುಧೀರ್ಘವಾಗಿ ಚರ್ಚೆ ನಡೆಸಿದರು. ಹಲವು ಸೂಚನೆಗಳನ್ನು ನೀಡಿದರು.

ಶಾಸಕರು ನಮ್ಮ ಜೊತೆ ಇದ್ದಾರೆ
ಪಕ್ಷದ ಕೆಲವು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳನ್ನು ಸಚಿವರು ತಳ್ಳಿ ಹಾಕಿದರು. 'ಎಲ್ಲಾ ಶಾಸಕರು ನಮ್ಮ ಜೊತೆಗೆ ಇದ್ದಾರೆ. ಎಲ್ಲರೂ ಸಭೆಯಲ್ಲಿ ಭಾಗಿಯಾಗುವ ಮೂಲಕ ಸರ್ಕಾರ ಸುಭದ್ರವಾಗಿದೆ ಎಂಬ ಸಂದೇಶ ರವಾನಿಸಿದ್ದಾರೆ' ಎಂದರು.












Click it and Unblock the Notifications