ಜಾನಪದ ಕ್ಷೇತ್ರ; ಹಾಸನದ ಹಂಪನಹಳ್ಳಿ ತಿಮ್ಮೇಗೌಡ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ಹಾಸನ, ಅಕ್ಟೋಬರ್ 28: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಮಂದಿಯನ್ನು ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜಾನಪದ ಕಲಾ ಕ್ಷೇತ್ರದಿಂದ ಹಾಸನ ಜಿಲ್ಲೆಯ ಡಾ. ಹಂಪನಹಳ್ಳಿ ತಿಮ್ಮೇಗೌಡ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರವನ್ನು ನೀಡಲಾಗುತ್ತಿದೆ.
ನಲವತ್ತು ವರ್ಷಗಳಿಂದ ಜಾನಪದ, ಸಾಹಿತ್ಯ, ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಡಾ.ಹಂಪನಹಳ್ಳಿ ತಿಮ್ಮೇಗೌಡ ಅವರಿಗೆ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಕರ್ನಾಟಕ ಸರ್ಕಾರ ಗೌರವಿಸಿದೆ.
65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಪುರಸ್ಕೃತರ ಪಟ್ಟಿ
ಡಾ. ಹಂಪನಹಳ್ಳಿ ತಿಮ್ಮೇಗೌಡ ಅವರು ಜಾನಪದ ಕಲೆಗೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿದ್ದರು. ಹತ್ತು ವರ್ಷಗಳಿಂದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ವಿಚಾರ ಸಂಕಿರಣ, ಕಮ್ಮಟ, ಕಾರ್ಯಕ್ರಮ, ಕಲಾ ಮೇಳಗಳನ್ನು ಸಂಘಟಿಸಿ ಸಂಚಾಲಕರಾಗಿ ಜನಪದ ಕಲೆಯ ಉನ್ನತಿಗೆ ಶ್ರಮಿಸಿದ್ದಾರೆ. 500ಕ್ಕಿಂತ ಹೆಚ್ಚು ಸಭೆ, ಸಮಾರಂಭಗಳಲ್ಲಿ ವಿಶೇಷ ಉಪನ್ಯಾಸ ನೀಡುವುದರೊಂದಿಗೆ ನೂರಾರು ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ಹಾಸನ ಜಿಲ್ಲೆಯ ಜಾನಪದ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿದ ಇವರು, ಜಿಲ್ಲೆಯ ಹಲವಾರು ಕಲಾವಿದರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಪರಿಚಯಿಸಿದ್ದಾರೆ. ಹಲವಾರು ವಿದ್ಯಾರ್ಥಿಗಳಿಗೆ ಸಂಶೋಧನಾ ಮಾರ್ಗದರ್ಶನವನ್ನೂ ಮಾಡಿದ್ದಾರೆ. ಜಾನಪದ ಕ್ಷೇತ್ರದಲ್ಲಿನ ಇವರ ಸೇವೆಯನ್ನು ಪರಿಗಣಿಸಿ ಈ ಬಾರಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
Recommended Video
ಪ್ರಸಕ್ತ ವರ್ಷ ಕರ್ನಾಟಕವು 65ನೇ ರಾಜ್ಯೋತ್ಸವ ಆಚರಿಸುತ್ತಿರುವ ಈ ಮಹತ್ವದ ಸಂದರ್ಭದ ಸಲುವಾಗಿ 65 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಾ. ಡಾ.ಹಂಪನಹಳ್ಳಿ ತಿಮ್ಮೇಗೌಡ ಅವರೊಂದಿಗೆ, ಬಾಗಲಕೋಟೆಯ ಗುರುರಾಜ ಹೊಸಕೋಟೆ ಅವರಿಗೂ ಜಾನಪದ ಕ್ಷೇತ್ರದಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.