ಹಾಸನದಲ್ಲಿ ಐಐಟಿ ಸ್ಥಾಪನೆ ದೇವೇಗೌಡರ ಕನಸಾಗಿತ್ತು : ಎಚ್ಡಿಕೆ
ಹಾಸನ, ಫೆಬ್ರವರಿ 15 : 'ಹಾಸನದಲ್ಲಿ ಐಐಟಿ ಸ್ಥಾಪಿಸಬೇಕೆಂಬುದು ದೇವೇಗೌಡರ ಕನಸಾಗಿತ್ತು. ಅದರಂತೆ ರಾಜ್ಯ ಸರ್ಕಾರದ ಅನುದಾನದಲ್ಲಿ ಹಾಸನದಲ್ಲಿ ವಿಶ್ವ ಮಟ್ಟದ ಕ್ಯಾಂಪಸ್ ಸ್ಥಾಪನೆ ಮಾಡಲಾಗುತ್ತದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಶುಕ್ರವಾರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ 995 ಲಕ್ಷ ವೆಚ್ಚದಲ್ಲಿ ಒಂದನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ, 450 ಹಾಸಿಗೆಗಳ ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಎಚ್.ಡಿ.ಕುಮಾರಸ್ವಾಮಿ ಶಂಕುಸ್ಥಾಪನೆ ಮಾಡಿದರು.
ಬಳಕ ಮಾತನಾಡಿದ ಅವರು, 'ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶ್ವ ಮಟ್ಟದ ಕ್ಯಾಂಪಸ್ ಸ್ಥಾಪನೆಗೆ ಚಾಲನೆ ನೀಡಲಾಗುವುದು. ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಶಿಕ್ಷಣದ ಮೂಲಕ ಹಲವಾರು ರೀತಿ ಬದಲಾವಣೆಗಳನ್ನು ತರಲಾಗುತ್ತಿದೆ' ಎಂದು ತಿಳಿಸಿದರು.

'ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ವಿಭಾಗ ಮಾಡುವ ಉದ್ದೇಶವಿಲ್ಲ. ಉತ್ತರ-ದಕ್ಷಿಣ ಎಂಬ ತಾರತಮ್ಯವಿಲ್ಲ ರಾಜ್ಯದ ಸಮಗ್ರ ಅಭಿವೃದ್ದಿಯೇ ಸಮ್ಮಿಶ್ರ ಸರ್ಕಾರದ ಚಿಂತನೆಯಾಗಿದೆ. ಮುಂದಿನ ದಿನಗಳಲ್ಲಿ ವೇಗವಾಗಿ ಕೆಲಸಗಳು ಆಗಲಿವೆ' ಎಂದರು.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಡಿ ರೇವಣ್ಣ, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದೀಯ ಕಾರ್ಯದರ್ಶಿಗಳಾದ ಎಂ.ಎ ಗೋಪಾಲಸ್ವಾಮಿ, ಶಾಸಕರುಗಳಾದ ಎ.ಟಿ.ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಚ್.ಕೆ.ಕುಮಾರಸ್ವಾಮಿ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.












Click it and Unblock the Notifications