ಎತ್ತಿನ ಹೊಳೆ ಯೋಜನೆ; ಮುಂದಿನ ವರ್ಷ ಪೂರ್ಣ ಎಂದ ಸಚಿವರು
ಹಾಸನ, ಜೂನ್ 18: ಬಹು ಆಕಾಂಕ್ಷಿತ ಎತ್ತಿನ ಹೊಳೆ ಯೋಜನೆಯು ಮುಂದಿನ ವರ್ಷ ಪೂರ್ಣಗೊಳ್ಳಲಿದೆ ಎಂದು ಆಹಾರ, ನಾಗರೀಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.
ಇಂದು ಸಕಲೇಶಪುರದ ಎತ್ತಿನ ಹೊಳೆ ಯೋಜನೆ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, "ಈಗಾಗಲೇ 85% ಕಾಮಗಾರಿ ಮುಗಿದಿದೆ. ಮುಂದಿನ ವರ್ಷದಲ್ಲಿ ಯೋಜನೆ ಪೂರ್ಣಗೊಳ್ಳಲಿದೆ" ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆಗೆ ವಿರೋಧ : ತೀರ್ಪು ಕಾಯ್ದಿರಿಸಿದ ಎನ್ಜಿಟಿ
"ಎತ್ತಿನ ಹೊಳೆ ಬಯಲು ಸೀಮೆಗೆ ನೀರು ಪೂರೈಸುವ ಮಹತ್ವದ ಯೋಜನೆ. ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಿಗೆ ಇದು ಉಪಯುಕ್ತ ಯೋಜನೆಯಾಗಿದೆ. ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಿ" ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಯೋಜನೆ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಂಡಿರುವ ಜಮೀನಿಗೆ ಬಾಕಿ ಇರುವ ಪರಿಹಾರವನ್ನೂ ಶೀಘ್ರವಾಗಿ ವಿತರಿಸಿ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಉಪ ವಿಭಾಗಾಧಿಕಾರಿ ಗಿರಿಶ್ ನಂದನ್, ಎತ್ತಿನ ಹೊಳೆ ಯೋಜನೆ ಕಾರ್ಯಪಾಲಕ ಅಭಿಯಂತರರಾದ ಜಯಣ್ಣ, ತಹಶೀಲ್ದಾರ್ ಮಂಜುನಾಥ್, ಮಾಜಿ ಶಾಸಕರಾದ ಹೆಚ್.ಎಂ ವಿಶ್ವನಾಥ್ ಮತ್ತಿತರರು ಹಾಜರಿದ್ದರು.