ಹಾವೇರಿ; ಫೆ. 26 ರಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಾವೇರಿ, ನವೆಂಬರ್ 24 : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಹಾವೇರಿಯಲ್ಲಿ 2021ರ ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಜಾತ್ರೆ ನಡೆಯಲಿದೆ.
ಮಂಗಳವಾರ ಕನ್ನಡ ಸಾಹಿತಿ ಪರಿತ್ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ನಿಗದಿ ಮಾಡಲಾಗಿದೆ.
2021ರ ಫೆಬ್ರವರಿ 26 ರಿಂದ 28ರ ತನಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಕನ್ನಡ ಸಾಹಿತಿ ಸಮ್ಮೇಳನ ನಡೆಸಲು ಅನುಕೂಲ ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ.
ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿ ಮಾಡುವ ಮೊದಲು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರ ಜೊತೆಗೂ ಮನು ಬಳಿಗಾರ್ ಚರ್ಚೆ ನಡೆಸಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಹೆಚ್ಚು ಜನರು ಸೇರುವ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದ್ದರಿಂದ, 2020ನೇ ಸಾಲಿನ ಕನ್ನಡ ಸಾಹಿತ್ಯ ಸಮ್ಮೇಳನ 2021ರಲ್ಲಿ ನಡೆಯಲಿದೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸುವ ಬಗ್ಗೆ 85ನೇ ಸಾಹಿತ್ಯ ಸಮ್ಮೇಳನದಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ, ಈಗ ದಿನಾಂಕವನ್ನು ನಿಗದಿ ಮಾಡಲಾಗಿದೆ.
ಕರ್ನಾಟಕ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು ಸಮ್ಮೇಳನ ನಡೆಸಲು ಅನುಮತಿ ನೀಡಲಿದೆ, ಅಗತ್ಯ ಅನುದಾನವನ್ನು ನೀಡಲಿದೆ. ಸರ್ಕಾರದ ಒಪ್ಪಿಗೆ ಬಳಿಕ ಅಕ್ಷರ ಜಾತ್ರೆಯ ದಿನಾಂಕ ಅಂತಿಮವಾಗಲಿದೆ.












Click it and Unblock the Notifications