86ನೇ ಕನ್ನಡ ಸಾಹಿತ್ಯ ಸಮ್ಮೇಳನ, ನೀವು ಲಾಂಛನ ಕಳಿಸಿ
ಹಾವೇರಿ, ಮಾರ್ಚ್ 08; 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ಕಾರಣಗಳಿಂದ ಮುಂದೂಡಲಾಗಿತ್ತು. ಈ ವರ್ಷದ ಮೇ ತಿಂಗಳಿನಲ್ಲಿ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆಗಳನ್ನು ಕೈಗೊಂಡಿದೆ. ಜನರಿಂದ ಸಾಹಿತ್ಯ ಸಮ್ಮೇಳನದ ಲಾಂಛನ ಮತ್ತು ಧ್ಯೇಯ ವಾಕ್ಯಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಮಾರ್ಚ್ 31ರೊಳಗೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲಾಂಛನ ಮತ್ತು ಧ್ಯೇಯ ವಾಕ್ಯ ರಚಿಸಿ ಕಳಿಸಬಹುದಾಗಿದೆ. ಆಯ್ಕೆಯಾದ ಲಾಂಛನ ಮತ್ತು ಧ್ಯೇಯ ವಾಕ್ಯಕ್ಕೆ ಸೂಕ್ತ ಗೌರವಧನ ನೀಡಲಾಗುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ್ ಜೋಶಿ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಲಾಂಛನ ಮತ್ತು ಧ್ಯೇಯವಾಕ್ಯ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಜನಪದ, ಕನ್ನಡ, ಕನ್ನಡಿಗ, ಕರ್ನಾಟಕವನ್ನು ಬಿಂಬಿಸುವ ಭಾವನಾತ್ಮಕ ಹಾಗೂ ಹಾವೇರಿ ಜಿಲ್ಲೆಯ ಪ್ರಾಮುಖ್ಯತೆ ಸಾರುವ ಅಂಶಗಳನ್ನು ಒಳಗೊಂಡಿರಬೇಕು.
ಸಾರ್ವಜನಿಕರು ಹಾಗೂ ಕಲಾವಿದರು ಲಾಂಛನ ಮತ್ತು ಧ್ಯೇಯವಾಕ್ಯ ರಚನೆ ಮಾಡಿ ಮಾರ್ಚ್ 31ರೊಳಗೆ ಕಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಳಾಸ; ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018. ಇ-ಮೇಲ್ ವಿಳಾಸ [email protected]
ಕರ್ನಾಟಕ ಸರ್ಕಾರ ಹಾವೇರಿಯಲ್ಲಿ ಮೇ ತಿಂಗಳಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022ನೇ ಸಾಲಿನ ಬಜೆಟ್ನಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ ನೀಡಿದ್ದಾರೆ.
ಹಾವೇರಿಯಲ್ಲಿ ಕನ್ನಡ ಜಾತ್ರೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದುವರೆಗೂ 85 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. 2009ರಲ್ಲಿಯೇ ಹಾವೇರಿಯಲ್ಲಿ ಕನ್ನಡ ಜಾತ್ರೆ ನಡೆಸಬೇಕು ಎಂಬ ಮನವಿ ಬಂದಿತ್ತು.
2014ರಲ್ಲಿ ಕೊಡಗು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದಾಗ 80ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಅವಕಾಶ ಹಾವೇರಿಗೆ ಸಿಕ್ಕಿತ್ತು. ಆದರೆ ಹಾವೇರಿ ಮತ್ತು ರಾಣೆಬೆನ್ನೂರು ನಗರಗಳ ಸ್ಥಳಗೊಂದಲದ ಕಾರಣ ಅವಕಾಶ ಕೈತಪ್ಪಿ ಹೋಗಿತ್ತು.
ಸಮ್ಮೇಳನ ಮುಂದೂಡಿಕೆ; 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿ ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು. 2021ರ ಫೆಬ್ರವರಿ 26 ರಿಂದ 28ರ ತನಕ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು.
ಸಾಹಿತ್ಯ ಸಮ್ಮೇಳನಕ್ಕೆ ಅಪಾರ ಜನರು ಸೇರುವುದರಿಂದ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಮಾಡಲಾಗಿತ್ತು. ಈ ಮೇ ತಿಂಗಳಿನಲ್ಲಿ ಸಮ್ಮೇಳನ ನಡೆಸಲು ತೀರ್ಮಾನ ಮಾಡಲಾಗಿದೆ.
2021ರಲ್ಲಿ ಹಾವೇರಿ ಜಿಲ್ಲಾಡಳಿತ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 15 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಆದರೆ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಯಿತು. ಈಗ ಸರ್ಕಾರ 20 ಕೋಟಿ ರೂ. ಅನುದಾನ ಮೀಸಲಿಟ್ಟಿದೆ.
ಹಲವು ವಿಘ್ನಗಳು; ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಲವಾರು ವಿಘ್ನಗಳು ಎದುರಾಗುತ್ತಿವೆ. 2014ರಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಜಿಲ್ಲೆಗೆ ಸಿಕ್ಕಿತ್ತು. ಆದರೆ ಹಾವೇರಿ ಮತ್ತು ರಾಣೆಬೆನ್ನೂರು ಸ್ಥಳದ ಗೊಂದಲದಿಂದ ಅವಕಾಶ ಕೈ ತಪ್ಪಿತು.
2020ರಲ್ಲಿ ಮತ್ತೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಹಾವೇರಿಗೆ ಸಿಕ್ಕಿತು. ನವೆಂಬರ್ ಅಥವ ಡಿಸೆಂಬರ್ನಲ್ಲಿ ನಡೆಯಬೇಕಿದ್ದ ಸಮ್ಮೇಳನ ಕೋವಿಡ್ ಕಾರಣಕ್ಕೆ ಮುಂದೂಡಲಾಯಿತು.
ಬಳಿಕ 2021ರ ಫೆಬ್ರವರಿ 26 ರಿಂದ 28ರ ತನಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಆಗಲೂ ಸಹ ಕೋವಿಡ್ ಕಾರಣದಿಂದಾಗಿ ಸಮ್ಮೇಳನ ನಡೆಯಲಿಲ್ಲ.












Click it and Unblock the Notifications