ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವತಿ ಮೇಲೆ ಹಾವೇರಿಯಲ್ಲಿ ಆಸಿಡ್ ದಾಳಿ
ಹಾವೇರಿ, ಜನವರಿ 29: ಹಾವೇರಿ ನಗರದಲ್ಲಿ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಯುವತಿಯ ಮೇಲೆ ಅಪರಿಚಿತ ಯುವಕ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಯುವತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿಯ ಶಿವಲಿಂಗೇಶ್ವರ ನಗರದ ನಿವಾಸಿಯಾದ ಯುವತಿ ಮೇಲೆ ನಿನ್ನೆ ರಾತ್ರಿ 8.45 ಗಂಟೆ ಸುಮಾರಿಗೆ ಅಪರಿಚಿತ ಯುವಕ ಆಸಿಡ್ ದಾಳಿ ಮಾಡಿ ಪರಾರಿಯಾಗಿದ್ದು, ಕೂಡಲೇ ಹಾವೇರಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು, ಸುದ್ದಿ ತಿಳಿದು ಹಾವೇರಿ ಶಾಸಕ ನೆಹರು ಓಲೇಕಾರ ಆಸ್ಪತ್ರೆಗೆ ಆಗಮಿಸಿ ಯುವತಿಯ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕಳುಹಿಸಿಕೊಟ್ಟರು.
ಆ್ಯಸಿಡ್ ಎರಚಿ, ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಹಲ್ಲೆ
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನೆಹರು ಓಲೇಕಾರ, ""ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಆಸಿಡ್ ದಾಳಿ ಮಾಡಿದ ಆರೋಪಿಯನ್ನು ಅತೀ ಶೀಘ್ರ ಬಂಧಿಸಲು ಕೂಡಲೇ ತನಿಖಾ ತಂಡ ರಚಿಸಿ ಆರೋಪಿ ಪತ್ತೆಗೆ ಪೋಲಿಸ್ ಇಲಾಖೆ ಕಾರ್ಯೋನ್ಮುಖರಾಗಬೇಕು, ಹಾಗೂ ನನಗೆ ಈ ಪ್ರಕರಣದ ಕುರಿತು ಮಾಹಿತಿ ನೀಡಬೇಕು'' ಎಂದು ಸ್ಥಳದಲ್ಲೇ ಉಪಸ್ಥಿತರಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಆದೇಶಿಸಿದರು.
ಹಾವೇರಿ ನಗರದ ರಾಣೇಬೆನ್ನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಯುವತಿಯ ಬಲಗೆನ್ನೆಗೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಹಾವೇರಿ ನಗರದ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ
ಯುವತಿ ಮುಖಕ್ಕೆ ಆಸಿಡ್ ದಾಳಿ ಹಿನ್ನೆಲೆಯಲ್ಲಿ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.