ಹಾವೇರಿ : ಶನಿವಾರದ ರಾಹುಲ್ ಗಾಂಧಿ ಸಮಾವೇಶಕ್ಕೆ ವೇದಿಕೆ ಸಿದ್ಧ
ಬೆಂಗಳೂರು, ಮಾರ್ಚ್ 08 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮಾವೇಶಕ್ಕೆ ಹಾವೇರಿ ಸಿದ್ಧವಾಗಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲ ಮೂಲ ಕಾಂಗ್ರೆಸ್ ಅಧ್ಯಕ್ಷರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಚ್ 9ರ ಶನಿವಾರ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದು, ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ.
ಹಾವೇರಿ ಲೋಕಸಭಾ ವ್ಯಾಪ್ತಿಯ ಸುಮಾರು 1 ಲಕ್ಷ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಪಕ್ಷದ ಶಾಸಕರು, ಪದಾಧಿಕಾರಿಗಳು ಸಮಾವೇಶದ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವ ಎಸ್ಪಿಜಿ ತಂಡ ಈಗಾಗಲೇ ಹಾವೇರಿಗೆ ಆಗಮಿಸಿದೆ. ಸಮಾವೇಶದ ಸ್ಥಳ, ವಾಹನ ಸಂಚಾರ ವ್ಯವಸ್ಥೆ ಮುಂತಾದವುಗಳ ಮಾಹಿತಿಯನ್ನು ತಂಡ ಸ್ಥಳೀಯ ಪೊಲೀಸರಿಂದ ಪಡೆದುಕೊಂಡಿದೆ.

ರಾಹುಲ್ ಗಾಂಧಿ ಸಮಾವೇಶ
ಮಾ.9ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ದಿನೇಶ್ ಗುಂಡೂರಾವ್ ಸಭೆ
ರಾಹುಲ್ ಗಾಂಧಿ ಅವರ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪಣ ತೊಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎಲ್ಲಾ ಜವಾಬ್ದಾರಿ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜಮೀರ್ ಅಹಮದ್ ಖಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಜೊತೆ ಸಮಾವೇಶ ಸಿದ್ಧತೆ ಕುರಿತು ಸಭೆ ನಡೆಸಿದರು.

ಕ್ಷೇತ್ರದ ಅಭ್ಯರ್ಥಿ ಯಾರು?
ಗದಗ-ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. 2009, 2014ರ ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ ಉದಾಸಿ ಅವರು ಗೆದ್ದು ಬಂದಿದ್ದಾರೆ. ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ನ ಸಲೀಂ ಅಹಮದ್ ಅಭ್ಯರ್ಥಿಯಾಗಿದ್ದು ಸೋಲು ಕಂಡಿದ್ದಾರೆ. ಈ ಬಾರಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.

1 ಲಕ್ಷ ಜನರು ಆಗಮಿಸಲಿದ್ದಾರೆ
'ರಾಹುಲ್ ಗಾಂಧಿ ಅವರ ಸಮಾವೇಶಕ್ಕೆ 8 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುಮಾರು 1 ಲಕ್ಷ ಜನರು ಆಗಮಿಸಲಿದ್ದಾರೆ. ಈಗಾಗಲೇ ಬೃಹತ್ ವೇದಿಕೆ ಸಿದ್ಧವಾಗಿದೆ. 40 ಸಾವಿರ ಕಾರ್ಯಕರ್ತರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ' ಎಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಹೇಳಿದರು.












Click it and Unblock the Notifications