ಹಾವೇರಿ: ಚುನಾವಣೆಯಲ್ಲಿ ಎದುರಾಳಿಯನ್ನು ದುರ್ಬಲ ಎಂದು ತಿಳಿಯಬಾರದು
ಹಾವೇರಿ, ಅಕ್ಟೋಬರ್ 13: ಯುದ್ಧದ ಸಂದರ್ಭದಲ್ಲಿ ನಮ್ಮ ಎದುರಾಳಿಗಳು ಎಷ್ಟೇ ದುರ್ಬಲವಾಗಿದ್ದರೂ ನಾವು ಮೈಮರೆಯಬಾರದು, ಎದುರಾಳಿ ಪ್ರಬಲವಾಗಿದ್ದಾನೆ ಎಂದೇ ಭಾವಿಸಬೇಕು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅ.28 ರಂದು ನಡೆಯಲಿದ್ದು, ಬಿಜೆಪಿಯಿಂದ ಸ್ಪರ್ಧಿಸಿರುವ ಎಸ್.ವಿ ಸಂಕನೂರು ಪರವಾಗಿ ಹಿರೆಕೇರೂರಿನಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರ ಕುರಿತು ಬಿ.ಸಿ ಪಾಟೀಲ್ ನೇತೃತ್ವದಲ್ಲಿ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿಯ 23 ಶಾಸಕರು, ಐವರು ಮಂತ್ರಿಗಳು, ನಾಲ್ವರು ಸಂಸದರಿದ್ದು, ಪಶ್ಚಿಮ ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆದರೂ ಸಹ ಎದುರಾಳಿಯನ್ನು ಹಗುರವಾಗಿ, ನಮ್ಮ ಗೆಲುವು ಸುಲಭ ಎಂದು ಪರಿಗಣಿಸದೆ ಇದು ಹೊಸ ಚುನಾವಣೆ ಎಂದು ಅಷ್ಟೇ ಹುಮ್ಮಸ್ಸಿನಿಂದ ಮನೆಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಬೇಕು. ಶಿಕ್ಷಣ ಸಂಸ್ಥೆಗಳ ಮುಖಂಡರು, ಶಿಕ್ಷಕರ ಸಂಘದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬರು ದುಡಿಯಬೇಕು ಎಂದು ಕರೆ ನೀಡಿದರು.
ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ಶಾಸಕರವರೆಗೆ ಎಲ್ಲರೂ ಅನುಭವಿಗಳೇ ಇರುವುದರಿಂದ ಈ ಚುನಾವಣೆಯನ್ನು ಗೆಲ್ಲಲೇಬೇಕು, ಸಂಕನೂರು ಅವರಿಗೆ ಜಯ ದೊರಕಿಸಿಕೊಡುವ ಚುನಾವಣಾ ನೀತಿ ರೂಪಿಸಬೇಕು ಎಂದು ಹೇಳಿದರು.
ಅಕ್ಟೋಬರ್ 18 ರಂದು ಹಿರೇಕೆರೂರು ತಾಲೂಕಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಭೇಟಿಗೂ ಮುನ್ನ ಪಕ್ಷ ಸಂಘಟನೆಗೆ ಒತ್ತು ನೀಡಲು ಈ ಪೂರ್ವಭಾವಿ ಸಭೆ ನಡೆಸಲಾಗಿದೆ. ಕ್ಷೇತ್ರದಲ್ಲಿ ಸಂಘಟಿತ ಉತ್ಸಾಹಿ ಬಿಜೆಪಿಯ ಕಾರ್ಯಕರ್ತರ ಪಡೆಯೇ ಇದೆ. ಎಲ್ಲರೂ ಎಸ್.ವಿ ಸಂಕನೂರರ ಗೆಲುವಿಗಾಗಿ ಶ್ರಮಿಸಬೇಕು ಎಂದು ಬಿ.ಸಿ ಪಾಟೀಲ್ ಹೇಳಿದರು.
ಅಭ್ಯರ್ಥಿ ಎಸ್.ವಿ ಸಂಕನೂರು ಮಾತನಾಡಿ, ಹಿರೇಕೆರೂರಿನಲ್ಲಿ ಬಿಜೆಪಿಯ ಸಾಹಸಿ ಕಾರ್ಯಪಡೆಯೇ ಇದೆ. ಕೃಷಿ ಸಚಿವರಾದ ಬಿ.ಸಿ ಪಾಟೀಲರ ನೇತೃತ್ವದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ತಮ್ಮ ಗೆಲುವಿಗೆ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಶ್ರಮಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ್, ಪಟ್ಟಣ ಪಂಚಾಯಿತಿ ಸದಸ್ಯರಾದ ಗುರುಶಾಂತ ಎತ್ತಿನಹಳ್ಳಿ, ಮಹೇಂದ್ರ ಬಡಳ್ಳಿ, ಶಕ್ತಿಕೇಂದ್ರದ ಪ್ರಮುಖರು ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು.











Click it and Unblock the Notifications