PMFBY: ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದೇಕೆ ಸಂಸದ ಬಸವರಾಜ ಬೊಮ್ಮಾಯಿ?
ಬೆಂಗಳೂರು, ಆಗಸ್ಟ್ 19: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದ ಬಳಿಕ ಮಾಜಿ ಮುಖ್ಯಮಂತ್ರಿಗಳು ಆಗಿರುವ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಪರ ಓಡಾಡುತ್ತಿದ್ದಾರೆ. ಇದೀಗ ತಮ್ಮ ಜಿಲ್ಲೆಯ ರೈತರ ಪರವಾಗಿ ಕೇಂದ್ರ ಕೃಷಿ ಸಚಿವರಿಗೆ ಅವರು ಪತ್ರ ಮುಖೇನ ಒಂದಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಶೀಘ್ರವೇ ಇಥ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದಾರೆ.

ಬೊಮ್ಮಾಯಿಯವರು ಬರೆದ ಪತ್ರದಲ್ಲೇನಿದೆ?
ಈ ಪತ್ರದಲ್ಲಿ 'ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ.
ಕರ್ನಾಟಕದ ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು ಕಳೆದ 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ.

ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, (RGICL) ಜವಾಬ್ದಾರಿಯನ್ನು ಹೊಂದಿದ್ದು, ಸದರಿ ಕಂಪನಿಯು ಕೆಲವೊಂದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದು ಅವರ ಆಕ್ಷೇಪಣೆಗಳಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯು ಸಮರ್ಪಕ ಉತ್ತರವನ್ನು ಸಲ್ಲಿಸಿದೆ. ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂಪನಿ ಎತ್ತಿರುವ ಆಕ್ಷೇಪಗಳು ನ್ಯಾಯಸಮ್ಮತವಾಗಿಲ್ಲ, ಅಲ್ಲದೇ ವಿಮೆ ಪರಿಹಾರ ನೀಡಲು ಅನಗತ್ಯ ವಿಳಂಬ ತಂತ್ರ ಅನುಸರಿಸುತ್ತಿರುವಂತೆ ಕಾಣಿಸುತ್ತಿದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಗೆ ಒಟ್ಟು 2023-24ನೇ ಸಾಲಿನ ಬೆಳೆ ವಿಮೆ ಮೊತ್ತವನ್ನು ರೂ.260.94 ಕೋಟಿಗಳನ್ನು ಪಾವತಿಸಲಾಗಿದೆ. ಅದರಲ್ಲಿ ವಿಮೆ ಕ್ರೈಮ್ ಮೊತ್ತವು ರೂ.132.65 ಕೋಟಿಗಳಾಗಿದೆ. ಉಳಿದ ರೂ.66.05 ಕೋಟಿಗಳ ಮೊತ್ತವನ್ನು ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಯು ದಿನಾಂಕ: 24.04.2024ರ ನಡವಳಿಯಲ್ಲಿ ಶಿಫಾರಸ್ಸು ಮಾಡಿರುತ್ತದೆ.
ಆಗಸ್ಟ್ 22ಕ್ಕೆ ತಾಂತ್ರಿಕ ಸಲಹಾ ಸಮಿತಿ ಸಭೆ
ಹಾವೇರಿ ಜಿಲ್ಲೆಯ ರೈತರು ಈಗಾಗಲೇ ಬರ ಹಾಗೂ ಪ್ರವಾಹದಿಂದ ತತ್ತರಿಸಿದ್ದಾರೆ. ಇದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ತಾವು ಇದೇ ಆಗಸ್ಟ್ 22 ಎಂದು ನಡೆಯುವ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವೈಯಕ್ತಿಕ ಆಸಕ್ತಿ ವಹಿಸಿ ರೈತರಿಗೆ ಬೆಳೆ ವಿಮೆ ಪರಿಹಾರ ಕೊಡೆಸಿ ರೈತರ ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ವಹಿಸಬೇಕು' ಎಂದು ಬಸವಾರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.
ಇದಲ್ಲದೇ ರಾಜ್ಯ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರಿಗೂ ಪತ್ರ ಬರೆದಿದ್ದು, ರೈತರಿಗೆ ಬೆಳೆ ಪರಿಹಾರ ಕೊಡಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.












Click it and Unblock the Notifications