ಇಂದು ಬಿಜೆಪಿ ಸೇರ್ಪಡೆಗೊಳ್ಳಲಿರುವ 'ಕೌರವ' ಬೆಂಬಲಿಗರು
ಹಾವೇರಿ, ನವೆಂಬರ್ 16: ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಡಿ.05 ರಂದು ಉಪ ಚುನಾವಣೆ ನಡೆಯುತ್ತಿದೆ. ಅನರ್ಹ ಶಾಸಕ ಬಿ.ಸಿ.ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ರವರ ಸಾವಿರಾರು ಅಭಿಮಾನಿಗಳು ಭಾರತೀಯ ಜನತಾ ಪಕ್ಷ ಸೇರ್ಪಡಗೊಳ್ಳುತ್ತಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದರು. ಹೀಗಾಗಿ ಕೆಲವು ಮುಖಂಡರು ಸೇರಿದಂತೆ ಅನೇಕ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ.
ಹಾವೇರಿಯ ಹಿರೇಕೆರೂರು, ಹಂಸಭಾವಿ, ಕೋಡ, ಮಾಸೂರು, ಚಿಕ್ಕೇರೂರು ಸೇರಿದಂತೆ ಹಲವು ಕಡೆ ಪಾಟೀಲ್ ಅಭಿಮಾನಿಗಳು ಕಮಲ ಪಕ್ಷ ಸೇರಲು ತಯಾರಿ ನಡೆಸಿದ್ದಾರೆ. ಚಿತ್ರ ನಟರೂ ಆಗಿದ್ದ ಬಿ.ಸಿ.ಪಾಟೀಲ್ ಗೆ ಕ್ಷೇತ್ರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಯು.ಬಿ.ಬಣಕಾರ್ ರನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದರು. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ವಂಚಿತರಾಗಿದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಆದರೆ ಅಂದಿನ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಬಿ.ಸಿ.ಪಾಟೀಲ್ ಸೇರಿದಂತೆ 17 ಜನ ಶಾಸಕರನ್ನು ಅನರ್ಹಗೊಳಿಸಿದ್ದರು.

ಪಾಟೀಲ್ ಅಭಿಮಾನಿಗಳ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಯು.ಬಿ.ಬಣಕಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಯು.ಬಿ.ಬಣಕಾರ್ ಈಗ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಹೇಳಿದ್ದು, ಪಾಟೀಲ್ ನಿಟ್ಟುಸಿರು ಬಿಡುವಂತಾಗಿದೆ.












Click it and Unblock the Notifications