ಹಾವೇರಿ ಜಿಲ್ಲೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ
ಹಾವೇರಿ, ಸೆಪ್ಟೆಂಬರ್ 22 : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಸೆಪ್ಟೆಂಬರ್ 23ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 21ರಂದು ಮತದಾನ ನಡೆಯಲಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಪತ್ರಿಕಾಗೋಷ್ಠಿಯಲ್ಲಿ ಉಪ ಚುನಾವಣೆ ಬಗ್ಗೆ ಮಾಹಿತಿ ನೀಡಿದರು. "ಸೆಪ್ಟೆಂಬರ್ 23ರ ಸೋಮವಾರ ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಶನಿವಾರದಿಂದಲೇ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ" ಎಂದು ಹೇಳಿದರು.
ಅಥಣಿ ಉಪ ಚುನಾವಣೆ; ಲಕ್ಷ್ಮಣ ಸವದಿಗೆ ಇಲ್ಲ ಬಿಜೆಪಿ ಟಿಕೆಟ್
ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಸೆಪ್ಟೆಂಬರ್ 30ರ ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 1ರ ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 3ರ ಗುರುವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಪ್ರವಾಹ, ದಸರಾಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ ಇಲ್ಲ
ಅಕ್ಟೋಬರ್ 21ರ ಸೋಮವಾರ ಮತದಾನ ನಡೆಯಲಿದೆ. ಅಕ್ಟೋಬರ್ 24ರ ಗುರುವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಅಕ್ಟೋಬರ್ 27ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವನಾ ಫಲಿತಾಂಶ ಪ್ರಕಟಗೊಳ್ಳುವ ತನಕ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ.
ದೀಪಾವಳಿಗೂ ಮುನ್ನವೇ ಉಪಚುನಾವಣೆ: 15 ಕ್ಷೇತ್ರಗಳ ಪಟ್ಟಿ ಹೀಗಿದೆ
ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರ
2018ರ ವಿಧಾನಸಭೆ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಕೆಪಿಜೆಪಿಯ ಆರ್. ಶಂಕರ್ ಜಯಗಳಿಸಿದ್ದರು. ಹಿರೇಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ನ ಬಿ. ಸಿ. ಪಾಟೀಲ್ ಜಯಗಳಿಸಿದ್ದರು. ಇಬ್ಬರೂ ಸಹ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದು, ಉಪ ಚುನಾವಣೆ ಎದುರಾಗಿದೆ.
ಎಷ್ಟು ಮತದಾರರು?
ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 94,238 ಪುರುಷರು ಹಾಗೂ 88,554 ಜನ ಮಹಿಳೆಯರು 4 ಇತರರು ಸೇರಿ ಸೇರಿದಂತೆ 1,82,796 ಮತದಾರರು ಇದ್ದಾರೆ. ರಾಣೆಬೆನ್ನೂರ ಕ್ಷೇತ್ರದಲ್ಲಿ 1,18,396 ಪುರುಷರು ಹಾಗೂ 1,14,076 ಮಹಿಳೆಯರು ಹಾಗೂ 13 ಜನ ಇತರರು ಸೇರಿ 2,32,485 ಮತದಾರರಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ 229, ರಾಣೆಬೆನ್ನೂರಿನಲ್ಲಿ 266 ಮತಗಟ್ಟೆ ಸ್ಥಾಪಿಸಲಾಗುತ್ತದೆ.
ಮತದಾರರ ಪಟ್ಟಿ
ಉಪ ಚುನಾವಣೆ ನಡೆಯುವ ಎರಡು ಮತ ಕ್ಷೇತ್ರಗಳಲ್ಲಿ ಮತದಾನ ಮಾಡಲು 01-01-2019 ಅರ್ಹತಾ ದಿನಾಂಕವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳಸಿದ ಮತದಾರರ ಪಟ್ಟಿಯನ್ನು ಬಳಸಲಾಗುತ್ತದೆ. ಮತದಾನ ಜಾಗೃತಿಗಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವೀಪ್ ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ನೀತಿ ಸಂಹಿತೆ ತಕ್ಷಣದಿಂದ ಜಾರಿ
ಸೆಪ್ಟೆಂಬರ್ 21ರ ಶನಿವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.