ಹಾವೇರಿ: 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂ ಚಾಲನೆ
ಹಾವೇರಿ, ನವೆಂಬರ್ 13: ಉತ್ತಮ ಆರೋಗ್ಯ ಸೇವೆ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಹಾವೇರಿಯಲ್ಲಿ 'ಆರೋಗ್ಯ ನಗರ'ವನ್ನು ನಿರ್ಮಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಹಾವೇರಿಯಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡದ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಮೂಲಕ ಚಾಲನೆ ನೀಡಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "ರಾಜ್ಯದಲ್ಲಿ ಇದೇ ವರ್ಷ 4 ಮೆಡಿಕಲ್ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ನಿರ್ಮಾಣ ಪ್ರಕ್ರಿಯೆ ಶುರುವಾಗಿದೆ" ಎಂದರು.

ಹಾವೇರಿಯಲ್ಲಿ ಆರೋಗ್ಯ ನಗರ ನಿರ್ಮಾಣ
"ಹಾವೇರಿಯಲ್ಲಿ ಹೊಸ ಮೆಡಿಕಲ್ ಕಾಲೇಜು ಕ್ಯಾಂಪಸ್ ನಲ್ಲಿ ಎಲ್ಲ ಬಗೆಯ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದ್ದು, ಹೆಚ್ಚು ಸಂಖ್ಯೆಯ ವೈದ್ಯರು ಆರೋಗ್ಯ ಕ್ಷೇತ್ರಕ್ಕೆ ಸಿಗಲಿದ್ದಾರೆ. ಇದರಿಂದ ಹಾವೇರಿಯಲ್ಲಿ ಆರೋಗ್ಯ ನಗರ ನಿರ್ಮಾಣವಾಗಲಿದೆ" ಎಂದು ಅಭಿಪ್ರಾಯಪಟ್ಟರು.
"ಕಳೆದ 6 ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ 157 ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಸಾಮಾಜಿಕ ಬದ್ಧತೆ ಇರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಕೆಲಸ ಮಾಡಿದೆ ಎಂದು ತಿಳಿಸಿದರು.

ಸ್ನಾತಕೋತ್ತರದ 17 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ
ಹಿಂದುಳಿದ ವರ್ಗ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕನಸಾಗಿದ್ದು, ಈಗ ಅಂತಹವರಿಗೆ ಅನುಕೂಲವಾಗಿದೆ. ಹೊಸ ಕಾಲೇಜುಗಳಿಂದ ದೇಶದಲ್ಲಿ ಒಟ್ಟು 27 ಸಾವಿರ ವಿದ್ಯಾರ್ಥಿಗಳಿಗೆ ಲಾಭವಾಗಿದೆ. ಸ್ನಾತಕೋತ್ತರದ 17 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಸಕ್ರಿಯ ಪ್ರಕರಣಗಳು ಕೂಡ ಬಹಳ ಕಡಿಮೆ
"ಕೋವಿಡ್ ಸೋಂಕು ಮಾರ್ಚ್ ನಲ್ಲಿ ಪತ್ತೆಯಾದಾಗ ಲಾಕ್ ಡೌನ್ ಮಾಡಲಾಯಿತು. ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಹೀಗಾಗಿ ಈಗ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಜಾಗತಿಕ ಮಟ್ಟದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.2.5 ರಿಂದ 3 ರಷ್ಟಿದೆ. ದೇಶದಲ್ಲಿ ಶೇ.1.4 ರಷ್ಟು ಹಾಗೂ ರಾಜ್ಯದಲ್ಲಿ 1.37 ಇದೆ. ಬೆಂಗಳೂರಿನಲ್ಲಿ ಶೇ.1.01 ರಷ್ಟಿದೆ. ಸಕ್ರಿಯ ಪ್ರಕರಣಗಳು ಕೂಡ ಬಹಳ ಕಡಿಮೆಯಾಗಿದೆ" ಎಂದು ಮಾಹಿತಿ ನೀಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಷಿ, ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೇಕಾರ ಉಪಸ್ಥಿತರಿದ್ದರು.
Recommended Video

ಸಚಿವರು ಹೇಳಿದ ಇತರೆ ಅಂಶಗಳು
* ಹೊಸದಾಗಿ 2,500 ವೈದ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಿಂದ 800 ವೈದ್ಯರನ್ನು ನೇಮಕ ಮಾಡಿ ಹಳ್ಳಿಗಳಿಗೆ ನಿಯೋಜಿಸಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ವೈದ್ಯರ ಕೊರತೆ ನೀಗಲಿದೆ.
* ಪ್ರತಿ ದಿನ ಕೋವಿಡ್ ಪರೀಕ್ಷೆಗೆ ನಮ್ಮ ಸರ್ಕಾರ 8 ಕೋಟಿ ರೂ. ಖರ್ಚು ಮಾಡುತ್ತಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ 1.15 ಕೋಟಿ ಕುಟುಂಬಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ.
* ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲ ಎಂಬ ದೂರಿದೆ. ಈ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಬದಲಿಸಲಾಗುವುದು.
* ಐರೋಪ್ಯ ದೇಶಗಳಲ್ಲಿ ಮತ್ತೆ ಲಾಕ್ ಡೌನ್ ಆರಂಭಿಸಿದ್ದಾರೆ. ಲಸಿಕೆ ಬರುವವರೆಗೂ ನಮ್ಮಲ್ಲೂ ಭೌತಿಕ ಅಂತರ, ಮಾಸ್ಕ್ ಧರಿಸುವ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದೀಪಾವಳಿ ಹಬ್ಬ, ಚಳಿಗಾಲದ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.












Click it and Unblock the Notifications