ಹಾವೇರಿಯಲ್ಲಿ ಗುತ್ತಿಗೆ 'ಗುಮ್ಮ'ನ ವಿರುದ್ಧ ಕೆರಳಿದ ಕಾರ್ಮಿಕರು
ಹಾವೇರಿ, ಜನವರಿ.13: ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಯಲ್ಲಿ ನೂರಾರು ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನೆರೆದ ಭಾರತೀಯ ಕ್ರಾಂತಿಕಾರಿ ಕಾರ್ಮಿಕ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯಲ್ಲಿ ಹೊರ ಗುತ್ತಿಗೆ ನೀಡುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹೊರ ಗುತ್ತಿಗೆ ಕ್ರಮದಿಂದ ನೌಕರರಲ್ಲಿ ಅಭದ್ರತೆಯ ಆತಂಕ ಕಾಡುತ್ತಿದೆ. ಇದನ್ನು ಹೋಗಲಾಡಿಸಲು ಸರ್ಕಾರವು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯ ಯಾವುದೇ ಇಲಾಖೆಯಲ್ಲೂ ಹೊರ ಗುತ್ತಿಗೆ ಪದ್ಧತಿ ಜಾರಿಯಲ್ಲಿ ಇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಿನಗೂಲಿ ನೌಕರರನ್ನು ಖಾಯಂಗೊಳಿಸಲು ಆಗ್ರಹ:
ಹಾವೇರಿ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ನೆರೆದ ವಿವಿಧ ಸಂಘಟನೆಗಳ ಕೂಗು ಒಂದೇ ಆಗಿತ್ತು. ದಿನಗೂಲಿ ನೌಕರರಿಗೆ ನ್ಯಾಯ ಕೊಡಿಸಬೇಕು. ಇಷ್ಟುದಿನಗಳ ಕಾಲ ದುಡಿದ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಇನ್ನು, ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಹೊರ ಗುತ್ತಿಗೆ ನೌಕರರು ಹಾಗೂ ಮಹಿಳಾ ಕಾರ್ಮಿಕರು ಭಾಗಿಯಾಗಿದ್ದರು.











Click it and Unblock the Notifications