86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಹಾವೇರಿ, ಫೆಬ್ರವರಿ 5: ಇದೇ ಫೆಬ್ರವರಿ ಅಂತ್ಯದಲ್ಲಿ ಯಾಲಕ್ಕಿ ನಗರಿ ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗಿದೆ.
ಗೃಹ ಸಚಿವ ಹಾಗೂ ಹಾವೇರಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದೂಡಿಕೆಯ ತೀರ್ಮಾನ ತೆಗೆದುಕೊಳ್ಳಲಾಯಿತು.
ತಾತ್ಕಾಲಿಕವಾಗಿ ಸಮ್ಮೇಳನ ಮುಂದೂಡಲು ಸಭೆಯಲ್ಲಿ ತೀರ್ಮಾನಿಸಿದ್ದು, ಸಮ್ಮೇಳನದಲ್ಲಿ ಹೆಚ್ಚು ಜನರು ಸೇರುವುದರಿಂದ ಕೊವೀಡ್ ನಿಯಮ ಪಾಲನೆ ಕಷ್ಟಕರವಾಗುತ್ತದೆ. ಹೀಗಾಗಿ ಫೆಬ್ರವರಿ ಅಂತ್ಯಕ್ಕೆ ಹೊಸ ಮಾರ್ಗಸೂಚಿ ಪ್ರಕಟವಾದ ನಂತರ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.

ಆ ನಂತರ ಮಾರ್ಚ್ 9ಕ್ಕೆ ಮತ್ತೊಮ್ಮೆ ಸಭೆ ನಡೆಸಿ, ಸಮ್ಮೇಳನ ದಿನಾಂಕ ನಿಗದಿಪಡಿಸಲು ನಡೆಸಲು ಇದೇ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು. ಸಾಹಿತಿ ದೊಡ್ಡರಂಗೇಗೌಡ ಅವರು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ.
ಹಾವೇರಿಯಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಇನ್ನು ಅಪೂರ್ಣವಾಗಿದ್ದು, ಸಮ್ಮೇಳನ ನಡೆಯುವ ಜಾಗ ಗುರುತಿಸುವುದು ಸೇರಿದಂತೆ ಅನೇಕ ಕೆಲಸಗಳು ಹಾಗೆ ಉಳಿದಿವೆ. ಕಡಿಮೆ ಸಮಯದಲ್ಲಿ ಎಲ್ಲ ತಯಾರಿ ಕಷ್ಟ ಎಂಬ ಕಾರಣಕ್ಕೆ ಮುಂದೂಡುವ ತೀರ್ಮಾನಕ್ಕೆ ಬರಲಾಯಿತು.

ಇಂದಿನ ಸಭೆಯಲ್ಲಿ ಗೃಹ ಸಚಿವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೇರಿದಂತೆ ಕೃಷಿ ಸಚಿವ ಬಿಸಿ ಪಾಟೀಲ್, ತೋಟಗಾರಿಕಾ ಸಚಿವ ಆರ್.ಶಂಕರ್, ಶಾಸಕ ನೆಹರು ಓಲೇಕಾರ್, ಕಸಾಪ ಅಧ್ಯಕ್ಷ ಮನು ಬಳಿಗಾರ್ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಿದ್ದರು.












Click it and Unblock the Notifications