ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ
ಹಾವೇರಿ, ಅಕ್ಟೋಬರ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಹಾವೇರಿ, ಹುಬ್ಬಳ್ಳಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿ, ಚಿಕ್ಕೋಡಿ, ಕಲಬುರಗಿ, ಬಾಗಲಕೋಟೆ ಸೇರಿ ಹಲವೆಡೆ ಭಾರೀ ಮಳೆಯಾಗಿದ್ದು, ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ.
ಸಂಜೆ ವೇಳೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಅಲ್ಲಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮತ್ತು ಬಳ್ಳಾರಿಯ ಬೈರಾಪುರದಲ್ಲಿ ಸಿಡಿಲಿಗೆ ತಲಾ ಇಬ್ಬರು ಮೃತಪಟ್ಟಿದ್ದಾರೆ.
ಕೊಪ್ಪಳದ ಗೆದಗೇರಿ ತಾಂಡಾದಲ್ಲಿ, ವಿಜಯಪುರದ ಹತ್ತಳ್ಳಿಯಲ್ಲಿ, ಬೆಳಗಾವಿಯ ಅಷ್ಟಗಾದಲ್ಲಿ ತಲಾ ಒಬ್ಬರು ಸಿಡಿಲಿಗೆ ಬಲಿಯಾಗಿದ್ದು, ಬೆಳಗಾವಿಯ ಚಿಕ್ಕ ಉಳ್ಳಿಗೇರಿಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಗಣೇಶ ನಗರ ಸಂಪೂರ್ಣ ಜಲಾವೃತವಾಗಿದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜರ ಪರದಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ-ಮುನವಳ್ಳಿ, ಸವದತ್ತಿ-ಬೈಲಹೊಂಗಲ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ. ಕೋರೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದ್ದು, ಬೆಳೆಗಳು ನಾಶವಾಗಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಗದಗ ಜಿಲ್ಲೆಯ ಹಲವೆಡೆ ತಡರಾತ್ರಿ ಹಾಗೂ ಬೆಳಗಿನ ಜಾವ ಬಾರಿ ಮಳೆಯಾಗಿದೆ. ಜಿಲ್ಲೆಯ ಲಕ್ಷ್ಮೇಶ್ವರ ಭಾಗದಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲಾ ಜಲಾವೃತವಾಗಿವೆ.
ಲಕ್ಷ್ಮೇಶ್ವರ ಪಟ್ಟಣದ ಹಳೆ ಬಸ್ ನಿಲ್ದಾಣ ಬಳಿ, ಸೋಮೇಶ್ವರ ಟೆಂಪಲ್, ಹಳೆ ಸ್ಟೇಷನ್, ದೂದಪೀರ್ ನಾನಾ ದರ್ಗಾ ಭಾಗದ ರಸ್ತೆಗಳ ತುಂಬೆಲ್ಲಾ ಮಳೆನೀರು ನದಿಗಳಂತೆ ಹರಿದಿದೆ. ಸಾರ್ವಜನಿಕರು, ವಾಹನ ಸವಾರರು ಸಾಕಷ್ಟು ಪರದಾಡಿದ್ದಾರೆ. ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಹಲವು ಜಿಲ್ಲೆಗಳಲ್ಲಿ ಮಳೆ ಇನ್ನು ಮುಂದುವರೆದಿದೆ.












Click it and Unblock the Notifications