ಪಾಟೀಲರನ್ನು ಗೆಲ್ಲಿಸಿ, ರಾಹುಲ್ ಗಾಂಧಿ ಪಿಎಂ ಮಾಡಿ : ಎಚ್ಕೆ ಪಾಟೀಲ್
ಹಾವೇರಿ, ಏ.03, 2019: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗಲಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ್ ಅವರು ನಾಮಪತ್ರ ಸಲ್ಲಿಸಿದ ನಂತರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಕೆ.ಪಾಟೀಲ್ ಅವರು,
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ದೇಶದ ಜನರ ಬದುಕಿನಲ್ಲಿ ಬದಲಾವಣೆ ತರುವ 25 ಕ್ರಾಂತಿಕಾರಕ ಅಂಶಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಪಕ್ಷದ ಅಧ್ಯಕ್ಷರಾದ ರಾಹುಲ್ಗಾಂಧಿ ಅವರು ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ಇಡೀ ದೇಶಾದ್ಯಂತ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳ ಬಗ್ಗೆಯೇ ಚರ್ಚೆ, ಸಂವಾದಗಳು ನಡೆಯುತ್ತಿವೆ ಎಂದರು.
ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿರುವ ಅಂಶಗಳಲ್ಲಿ ಅತ್ಯಂತ ಪ್ರಮುಖವಾದುದೆಂದರೆ ದೇಶದ 20 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು 6000 ರೂಪಾಯಿಯಂತೆ ವಾರ್ಷಿಕ 72 ಸಾವಿರ ರೂಪಾಯಿಗಳ ನಿಶ್ಚಿತ ಆದಾಯ ಬರುವಂತಹ ಯೋಜನೆಯಾಗಿದೆ.
ಹಾವೇರಿ ಲೋಕಸಭಾ ಕ್ಷೇತ್ರದ ಸಮಗ್ರ ಚಿತ್ರಣ
ಇದು ಇಡೀ ದೇಶದಲ್ಲಿ ಜಾರಿಗೆ ತರುತ್ತಿರುವ ಕ್ರಾಂತಿಕಾರಿ ಮತ್ತು ಮೊದಲ ಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತರಲು ಕಾಂಗ್ರೆಸ್ ಪಕ್ಷ ಸಂಕಲ್ಪ ಮಾಡಿದ್ದು, ಇದನ್ನು ಕಾರ್ಯರೂಪಕ್ಕೆ ತರಬೇಕಾದರೆ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕೆಂದು ಮನವಿ ಮಾಡಿದರು.
ಪಾಟೀಲರಿಗೆ ಮತ ಹಾಕಿದರೆ ಪಕ್ಷದ ಶಕ್ತಿ ಹೆಚ್ಚುತ್ತದೆ
ಹಾವೇರಿ ಲೋಕಸಭೆ ಕ್ಷೇತ್ರದ ನಮ್ಮ ಅಭ್ಯರ್ಥಿ ಡಿ.ಆರ್.ಪಾಟೀಲರಿಗೆ ಮತ ಹಾಕಿದರೆ ಪಕ್ಷದ ಶಕ್ತಿ ಹೆಚ್ಚುತ್ತದೆ ಮತ್ತು ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಲು ಸಾಧ್ಯವಾಗುತ್ತದೆ. ಇದೆಲ್ಲಕ್ಕಿಂತ ಹೆಚ್ಚಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆದಂತಾಗುತ್ತದೆ ಎಂದು ಹೇಳಿದರು.
ಬಡವರ ಬಗ್ಗೆ ಕಾಳಜಿ ಇರುವ ಕಾಂಗ್ರೆಸ್
ಮಿಲಿಟರಿ ಜೀನ್ಸ್ ಹಾಕಿಕೊಂಡು, ಗಾಗಲ್ ಹಾಕಿಕೊಂಡು ದೇಶದ ಸೈನಿಕರಿಗೆ ಅವಮಾನ ಮಾಡುತ್ತಾ ದುರಾಡಳಿತ ನಡೆಸುತ್ತಿರುವ ಮೋದಿ ಅವರ ಸರ್ಕಾರವನ್ನು ತೆಗೆದು ಹಾಕಬೇಕಿದೆ. ಈ ಮೂಲಕ ಬಡವರ ಬಗ್ಗೆ ಕಾಳಜಿ ಇರುವ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಮತದಾರರೂ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.
ನಮಗೆ ಬಡವರ ಕಲ್ಯಾಣದ ಬಗ್ಗೆ ಬದ್ಧತೆ ಇದೆ
ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಇಂದು ನಿನ್ನೆಯಿಂದ ಕಾಳಜಿ ತೋರಿಸುತ್ತಿಲ್ಲ. ನಮಗೆ ಬಡವರ ಕಲ್ಯಾಣದ ಬಗ್ಗೆ ಬದ್ಧತೆ ಇದೆ. ಇಂದಿರಾಗಾಂಧಿ ಅವರು ಬಡವರ ಏಳ್ಗೆಗಾಗಿ ಗರೀಬಿ ಹಠಾವೋ ದಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರು. 20 ಅಂಶಗಳ ಕಾರ್ಯಕ್ರಮ, ಬ್ಯಾಂಕ್ ರಾಷ್ಟ್ರೀಕರಣ ಮಾಡಿರುವುದು ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಬಡವರ ಕೈಹಿಡಿಯುತ್ತಾ ಬಂದಿದೆ ಎಂದು ಪಾಟೀಲ್ ತಿಳಿಸಿದರು.
ಬಡಜನರಿಗಾಗಿ ಕ್ಷೀರಭಾಗ್ಯ, ಅನ್ನಭಾಗ್ಯ, ಕೃಷಿಭಾಗ್ಯ
ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರು ಬಡಜನರಿಗಾಗಿ ಕ್ಷೀರಭಾಗ್ಯ, ಅನ್ನಭಾಗ್ಯ, ಕೃಷಿಭಾಗ್ಯ, ಪಶುಭಾಗ್ಯ ಸೇರಿದಂತೆ ಹಲವಾರು ಭಾಗ್ಯಗಳನ್ನು ನೀಡಿ ಬಡವರ, ದೀನದಲಿತರ ಪರವಾದ ಆಡಳಿತ ನಡೆಸಿದೆ. ಪ್ರಣಾಳಿಕೆಯಲ್ಲಿ ನೀಡಿದ್ದ 165 ಕಾರ್ಯಕ್ರಮಗಳ ಪೈಕಿ ಬಹುತೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಸಿದ್ದರಾಮಯ್ಯ ಅವರದು ನುಡಿದಂತೆ ನಡೆದ ಸರ್ಕಾರವಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಎಚ್.ಕೆ.ಪಾಟೀಲ್ ಬಣ್ಣಿಸಿದರು.
ಡಿ. ಆರ್ ಪಾಟೀಲರು ನಮ್ಮ ಮಾರ್ಗದರ್ಶಕರು
ಇನ್ನು ಹಾವೇರಿಯ ಲೋಕಸಭೆ ಕ್ಷೇತ್ರದ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ್ ಅವರು ನಮಗೆಲ್ಲಾ ಮಾರ್ಗದರ್ಶಕರಾಗಿದ್ದಾರೆ. ಅವರು ಪಕ್ಷ ಸಂಘಟನೆಯಲ್ಲಿ, ರೈತರನ್ನು ರಕ್ಷಣೆ ಮಾಡುವಲ್ಲಿ, ಬಡವರಿಗೆ ಕಾರ್ಯಕ್ರಮ ರೂಪಿಸುವಲ್ಲಿ ಮತ್ತು ಪಂಚಾಯ್ತಿ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪಾಟೀಲರನ್ನು ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿ ಪಿಎಂ ಮಾಡಿ
ಅವರ ಈ ಸೇವೆಗಳನ್ನು ಮತ್ತು ಹಿರಿತನವನ್ನು ಗುರುತಿಸಿ ಪಕ್ಷದ ನಾಯಕರು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು, ಪಾಟೀಲರನ್ನು ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು.ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಬಿ.ಸಿ.ಪಾಟೀಲ್ ಸೇರಿದಂತೆ ಹಲವಾರು ಹಿರಿಯ ನಾಯಕರು ಪಾಲ್ಗೊಂಡಿದ್ದರು.