ಕೃಷಿ ಸಚಿವರಿಗೆ ಮನೆಯಲ್ಲೇ ಲಸಿಕೆ: ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗೆ ನೋಟಿಸ್!
ಹಾವೇರಿ, ಮಾರ್ಚ್.02: ಕರ್ನಾಟಕದ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ನಿವಾಸಕ್ಕೆ ತೆರಳಿ ಕೊರೊನಾವೈರಸ್ ಲಸಿಕೆಯನ್ನು ನೀಡಿದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರಾಜೇಂದ್ರ ದೊಡ್ಡಮನಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಜೆಡ್. ಆರ್. ಮಕಾಂದಾರ್ ಅವರಿಗೆ ನೋಟಿಸ್ ನೀಡಲಾಗಿದೆ.
ಕೊರೊನಾವೈರಸ್ ಶಿಷ್ಟಾಚಾರ ಉಲ್ಲಂಘಿಸಿ ಹಾವೇರಿ ಜಿಲ್ಲೆ ಹಿರೇಕೆರೂರು ನಗರದಲ್ಲಿ ಇರುವ ತಮ್ಮ ನಿವಾಸದಲ್ಲಿಯೇ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮಂಗಳವಾರ ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು.
ಹಿರೇಕೆರೂರುತಾಲೂಕು ಆರೋಗ್ಯಾಧಿಕಾರಿ ಮತ್ತು ಆರೋಗ್ಯ ಕಾರ್ಯಕರ್ತರನ್ನು ಮನೆಗೆ ಕರೆಸಿಕೊಂಡು ತಾವು ಮತ್ತು ತಮ್ಮ ಪತ್ನಿಗೆ ಕೊವಿಡ್-19 ಲಸಿಕೆ ಹಾಕಿಸಿಕೊಂಡರು. ಈ ಫೋಟೋ ವೈರಲ್ ಆಗುತ್ತಿದ್ದಂತೆ ಕೊರೊನಾವೈರಸ್ ಶಿಷ್ಟಾಚಾರದ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಸಚಿವರು ಹೇಳಿದ್ದರು.

ಶಿಷ್ಟಾಚಾರ ಉಲ್ಲಂಘಿಸಿದವರ ವಿರುದ್ಧ ಕ್ರಮ:
ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ಮನೆಗೆ ತೆರಳಿ ಕೊವಿಡ್-19 ಲಸಿಕೆ ನೀಡಿರುವುದು ಶಿಷ್ಟಾಚಾರದ ಉಲ್ಲಂಘನೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸಚಿವರ ಮನೆಗೆ ಹೋಗಿ ಲಸಿಕೆ ಹಾಕಿದ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ವರದಿ ಕೇಳಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ:
ಕೊರೊನಾವೈರಸ್ ಶಿಷ್ಟಾಚಾರವನ್ನು ಉಲ್ಲಂಘಿಸಿರುವ ಸಚಿವರ ಕ್ರಮವನ್ನು ಅನುಮತಿಸುವುದಕ್ಕೆ ಆಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಭೂಷಣ್ ತಿಳಿಸಿದ್ದಾರೆ. ಈ ಘಟನೆಗೆ ಸಬಂಧಿಸಿದಂತೆ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.












Click it and Unblock the Notifications