"ಕೊಟ್ಟ ಮಾತಿನಂತೆ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ''
ಹಾವೇರಿ, ಅಕ್ಟೋಬರ್ 23: ರೈತ ವಿರೋಧಿ ಕೃಷಿ ಮಸೂದೆ, ಕೊರೊನಾ ಉಪಕರಣಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ಮುಂತಾದ ಕಾರಣಗಳಿಂದ ಬಿಜೆಪಿ ಪಕ್ಷದ ಮೇಲೆ ಬೇಸರಗೊಂಡಿರುವ ಪ್ರಜ್ಞಾವಂತ ಮತದಾರರು, ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಗದಗ ಶಾಸಕ ಎಚ್.ಕೆ ಪಾಟೀಲ ಹೇಳಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಎಂ ಕುಬೇರಪ್ಪ ಪರವಾಗಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದ ಎಚ್.ಕೆ ಪಾಟೀಲ್, ರೈತ ಮಸೂದೆಗಳ ತಿದ್ದುಪಡಿಯ ಸಂಧರ್ಭದಲ್ಲಿ ಧ್ವನಿ ಮತ ಕೇಳಿದಾಗ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಮತ ಹಾಕಲು ಅನುಮತಿ ಕೋರಿದವು. ಆದರೆ, ಇದನ್ನು ಬಿಜೆಪಿ ನಿರಾಕರಿಸುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರಿದೆ ಮತ್ತು ಸಂಸದೀಯ ವ್ಯವಸ್ಥೆಗೆ ಅಪಮಾನ ಮಾಡಿದೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಮಾತಿನಂತೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಅದರ ಬದಲು ಉದ್ಯೋಗ ನಷ್ಟವಾಗುವಂತೆ ಮಾಡಿದ್ದಾರೆ. ನೋಟು ಬ್ಯಾನ್ ಮಾಡುವ ಮೂಲಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.

ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ಪೂರೈಸಲಾಗುವುದು ಎಂದು ಭರವಸೆ ನೀಡುವ ಮೂಲಕ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಎಚ್.ಕೆ ಪಾಟೀಲ್ ಆರೋಪಿಸಿದರು.












Click it and Unblock the Notifications