ಲೋಕಸಭಾ ಚುನಾವಣೆಗೆ ಹಾವೇರಿಯಲ್ಲಿ ಕಾಂಗ್ರೆಸ್ ಪರಿವರ್ತನೆ ಕೂಗು
ಹಾವೇರಿ, ಮಾರ್ಚ್ 9: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಪಕ್ಷಗಳ ಒಳಜಗಳ ಬದಿಗಿಟ್ಟು ಚುನಾವಣೆ ಸಿದ್ಧತೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ.
ಅದಕ್ಕೆ ನಾಂದಿಯೆಂಬಂತೆ ಹಾವೇರಿಯಲ್ಲಿ ಕಾಂಗ್ರೆಸ್ ಇಂದು ಪರಿವರ್ತನಾ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಸಮಾವೇಶದ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ ಊದಲು ಬರಲಿದ್ದಾರೆ.
ಹಾವೇರಿ : ಶನಿವಾರದ ರಾಹುಲ್ ಗಾಂಧಿ ಸಮಾವೇಶಕ್ಕೆ ವೇದಿಕೆ ಸಿದ್ಧ
ಹಾವೇರಿಯ ಮುನ್ಸಿಪಲ್ ಮೈದಾನದಲ್ಲಿ ಈ ಐತಿಹಾಸಿಕ ಸಮಾವೇಶ ನಡೆಯುತ್ತಿದ್ದು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ವಹಿಸಲಾಗಿದೆ.
ಈ ಮೊದಲು 2013ರಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಾಹುಲ್ ಹಾವೇರಿಗೆ ಆಗಮಿಸಿದ್ದರು. ಈ ಬಾರಿ ಲೋಕಸಭಾ ಚುನಾವಣೆಯ ಮೊದಲ ಪ್ರಚಾರ ಭಾಷಣವನ್ನು ಹಾವೇರಿಯಿಂದಲೇ ಆರಂಭಿಸುತ್ತಿದ್ದಾರೆ. ಇಂದು ಲೋಕಸಭಾ ಚುನಾವಣಾ ದಿನಾಂಕವೂ ಪ್ರಕಟವಾಗುವ ಸಾಧ್ಯತೆ ಇದೆ.
ಸಮಾವೇಶಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಹಾವೇರಿ ಮತ್ತು ಗದಗ ಜಿಲ್ಲೆಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ 40 ಸಾವಿರಕ್ಕೂ ಹೆಚ್ಚು ಖುರ್ಚಿಗಳು, 10 ಎಲ್ಇಡಿ ಟಿ.ವಿ. ಪರದೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಸುತ್ತಮುತ್ತಲೂ ಸಿ.ಸಿ. ಕ್ಯಾಮರಾ ಕಣ್ಗಾವಲು ಅಳವಡಿಸಲಾಗಿದೆ.