ಶಿಗ್ಗಾವಿ ಉಪ ಚುನಾವಣೆ: ಕಾಂಗ್ರೆಸ್ ಬಂಡಾಯ ಶಮನಕ್ಕೆ ಎಂಟ್ರಿ ಕೊಟ್ಟ ಸಿದ್ದರಾಮಯ್ಯ
ಹಾವೇರಿ, ಅಕ್ಟೋಬರ್ 26: ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ. ಉಪ ಚುನಾವಣೆಗೆ 26 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯವೇ ದೊಡ್ಡ ತಲೆನೋವಾಗಿದೆ. ಪಕ್ಷದ ಟಿಕೆಟ್ ಕೈತಪ್ಪಿದ ಇಬ್ಬರು ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ರಾಜೀನಾಮೆ ಕಾರಣಕ್ಕೆ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿಸುವ ಮೂಲಕ ಕ್ಷೇತ್ರ ಉಳಿಸಿಕೊಳ್ಳಲು ಮುಂದಾಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗೆ ಭಾರೀ ಪೈಪೋಟಿ ಇತ್ತು. ಅಂತಿಮವಾಗಿ ಗುರುವಾರ ಯಾಸೀರ್ ಅಹ್ಮದ್ ಖಾನ್ ಪಠಾಣ ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿತು. ಕೆಪಿಸಿಸಿ ಕಛೇರಿಯಿಂದ ಬಿ-ಫಾರಂ ಹಿಡಿದು ಬಂದ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ, ಮಂಜುನಾಥ್ ಕುನ್ನೂರು ಸಹ ಭಿನ್ನಾಭಿಪ್ರಾಯದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಎಂಟ್ರಿ: ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ಬಂಡಾಯವನ್ನು ತಣ್ಣಗಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಟ್ರಿಯಾಗಿದೆ. ಬೆಂಗಳೂರಿನ ಗೃಹ ಕಛೇರಿಯಲ್ಲಿ ಅವರು ಶನಿವಾರ ಅಜ್ಜಂಪೀರ್ ಖಾದ್ರಿ ಭೇಟಿಯಾಗಿ ಮಾತುಕತೆ ನಡೆಸಿದರು. ಅಜ್ಜಂಪೀರ್ ಖಾದ್ರಿ ಬೇಡಿಕೆಗೆ ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ. ನಾಮಪತ್ರ ವಾಪಸ್ ಪಡೆಯಲು ಸಹ ಅಜ್ಜಂಪೀರ್ ಖಾದ್ರಿ ಒಪ್ಪಿಗೆ ಕೊಟ್ಟಿಲ್ಲ.
ಅಂತಿಮವಾಗಿ ಸಿದ್ದರಾಮಯ್ಯ ಅಜ್ಜಂಪೀರ್ ಖಾದ್ರಿ ಮನವೊಲಿಕೆ ಮಾಡುವ ಹೊಣೆಯನ್ನು
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ಗೆ ನೀಡಿದ್ದಾರೆ.
ಶುಕ್ರವಾರವೇ ಜಮೀರ್ ಅಹ್ಮದ್ ಖಾನ್ ಇತರ ನಾಯಕರ ಜೊತೆ ಅಜ್ಜಂಪೀರ್ ಖಾದ್ರಿ ಮನೊವಲಿಕೆಗೆ ಅವರ ನಿವಾಸಕ್ಕೆ ತೆರಳಿದ್ದರು. ಆದರೆ ಆಗ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಜಮೀರ್ ಅಹ್ಮದ್ ಖಾನ್ ಕಾರಿನ ಮೇಲೆ ದಾಳಿ ನಡೆಸಿದ್ದರು. ಗಾಜುಗಳನ್ನು ಒಡೆದು ಹಾಕಿದ್ದರು. ನಾಮಪತ್ರ ಸಲ್ಲಿಕೆಗೆ ಕೆಲವೇ ಕ್ಷಣಗಳು ಇರುವಾಗ ಬೈಕ್ನಲ್ಲಿ ತಾಲೂಕು ಕಛೇರಿಗೆ ಬಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದರು.
ಸಿದ್ದರಾಮಯ್ಯ ಭೇಟಿಯ ವೇಳೆ ಅಜ್ಜಂಪೀರ್ ಖಾದ್ರಿ, "ನಾನು ಕ್ಷೇತ್ರದ ಮತದಾರರ ನಾಡಿಮಿಡಿತ ಬಲ್ಲವನಾಗಿದ್ದೇನೆ. ಆದ್ದರಿಂದ ಟಿಕೆಟ್ ನನಗೆ ನೀಡಬೇಕಿತ್ತು" ಎಂದು ಹೇಳಿದ್ದಾರೆ. ಆದರೆ ನಾಮಪತ್ರ ವಾಪಸ್ ಪಡೆಯುವ ನಿರ್ಧಾರವನ್ನು ಅವರು ಇನ್ನೂ ತೆಗೆದುಕೊಂಡಿಲ್ಲ. "ಕಾಂಗ್ರೆಸ್ ಅಭ್ಯರ್ಥಿಯೇ ನಾಮಪತ್ರ ವಾಪಸ್ ಪಡೆದು ನನಗೆ ಬೆಂಬಲ ನೀಡಿಲಿ" ಎಂದು ಬೇಡಿಕೆ ಇಟ್ಟಿದ್ದಾರೆ.
ನಾಮಪತ್ರ ವಾಪಸ್ ಪಡೆಯುವ ಬಗ್ಗೆ ತಮ್ಮ ತೀರ್ಮಾನವನ್ನು ಕೇಳಲು ಅಜ್ಜಂಪೀರ್ ಖಾದ್ರಿ ಕಾಲಾವಕಾಶವನ್ನು ಕೇಳಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಮನವೊಲಿಕೆಗಾಗಿ ಮಾತುಕತೆಯನ್ನು ನಡೆಸುತ್ತಿದ್ದಾರೆ.












Click it and Unblock the Notifications