Shiggaon By Election: ಶಿಗ್ಗಾವಿ ಕಾಂಗ್ರೆಸ್ ಬಂಡಾಯ ಶಮನ, ನಾಮಪತ್ರ ವಾಪಸ್
ಹಾವೇರಿ, ಅಕ್ಟೋಬರ್ 30: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಡೆಸಿದ ಸಂಧಾನಸಭೆ ಸಫಲವಾಗಿದೆ. ಹಾವೇರಿಯ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ. ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ. ನವೆಂಬರ್ 13ರಂದು ಶಿಗ್ಗಾವಿ ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ.
ಶಿಗ್ಗಾವಿ ಉಪ ಚುನಾವಣೆಗೆ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾದ ಅಕ್ಟೋಬರ್ 30ರ ಬುಧವಾರ ಅವರು ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಇದರಿಂದಾಗಿ ಬಂಡಾಯ ತಣ್ಣಗಾಗಿದೆ.

ಶಿಗ್ಗಾವಿ ಕ್ಷೇತ್ರದ ಬಂಡಾಯ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಂಡಾಯವನ್ನು ಶವಮನಗೊಳಿಸಲು ಶನಿವಾರ ಸಭೆ ನಡೆಸಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ಗೆ ಈ ಕುರಿತ ಜವಾಬ್ದಾರಿಯನ್ನು ನೀಡಿದ್ದರು. ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ.
ನಾಮಪತ್ರಗಳು ವಾಪಸ್: ಬುಧವಾರ ಸೈಯದ್ ಅಜ್ಜಂಪೀರ್ ಖಾದ್ರಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ ಜೊತೆ ತಹಶೀಲ್ದಾರ್ ಕಛೇರಿಗೆ ಭೇಟಿ ನೀಡಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ಕಾಂಗ್ರೆಸ್ ಟಿಕೆಟ್ಗೆ ಸೈಯದ್ ಅಜ್ಜಂಪೀರ್ ಖಾದ್ರಿ ಮತ್ತು ಮಂಜುನಾಥ್ ಕುನ್ನೂರು ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷ ಯಾಸೀರ್ ಅಹ್ಮದ್ ಖಾನ್ ಪಠಾಣ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದ್ದರಿಂದ ಇಬ್ಬರೂ ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು.
ಸೈಯದ್ ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆಯಲು ಒಪ್ಪಿಗೆ ನೀಡಿದ ಬಳಿಕ ಶಿಗ್ಗಾವಿಯ ಉಪ ಚುನಾವಣೆ ಕಣದಲ್ಲಿ ರಾಜಕೀಯ ಬಿರುಸಾಗಿತ್ತು. ಕಾಂಗ್ರೆಸ್ ನಾಯಕರು ಚುರುಕಿನಲ್ಲಿ ಪ್ರಚಾರ ನಡೆಸಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ ಸೈಯದ್ ಅಜ್ಜಂಪೀರ್ ಖಾದ್ರಿ ಅವರನ್ನು ಬೆಂಗಳೂರಿನಲ್ಲಿ ಉಳಿಯುವಂತೆ ಮಾಡಿದ್ದರು. ಇಂದು ಅವರ ಜೊತೆಯೇ ಆಗಮಿಸಿ ನಾಮಪತ್ರವನ್ನು ವಾಪಸ್ ಪಡೆಸಿದ್ದಾರೆ.
ಡಿ. ಕೆ. ಶಿವಕುಮಾರ್ ಮಾತನಾಡಿ, "ಕಳೆದ ಬಾರಿಯ ಚುನಾವಣೆಯಲ್ಲಿ ಅಜ್ಜಂಪೀರ್ ಖಾದ್ರಿ ಅವರಿಗೆ ಟಿಕೆಟ್ ಕೊಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಶಿಗ್ಗಾವಿ ಉಪಚುನಾವಣೆಯಲ್ಲಿಯೂ ಅವರ ಹೆಸರು ಪ್ರಮುಖವಾಗಿದ್ದು, ಹೈಕಮಾಂಡ್ ಅವರಿಗೆ ಇದಕ್ಕೆ ಸಮನಾದ ಅಧಿಕಾರವನ್ನು ನೀಡುವ ಭರವಸೆ ನೀಡಿದೆ" ಎಂದು ಹೇಳಿದ್ದರು.
"ಖಾದ್ರಿಯವರು ಪಕ್ಷದ ನಿಲುವಿಗೆ ಬದ್ಧರಾಗಿ ನಮ್ಮ ಜೊತೆ ಇರಲಿದ್ದಾರೆ. ನಾನು ಹಾಗೂ ನಮ್ಮ ಶಾಸಕರು, ಮುಖ್ಯಮಂತ್ರಿಗಳು ಖಾದ್ರಿ ಅವರ ಜೊತೆ ಮಾತನಾಡಿದ್ದು, ಅಕ್ಟೋಬರ್ 30ರಂದು ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ" ಎಂದು ತಿಳಿಸಿದ್ದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದರು. ಹಾವೇರಿ-ಗದಗ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಉಪ ಚುನಾವಣೆ ಎದುರಾಗಿದೆ. ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದ್ದಾರೆ. ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ ಅಭ್ಯರ್ಥಿ.












Click it and Unblock the Notifications