Get Updates
Get notified of breaking news, exclusive insights, and must-see stories!

Shiggaon By Election: ಶಿಗ್ಗಾವಿ ಬಂಡಾಯ ಶಮನ, ನಿಟ್ಟುಸಿರು ಬಿಟ್ಟ ಕಾಂಗ್ರೆಸ್‌ ನಾಯಕರು

ಹಾವೇರಿ, ಅಕ್ಟೋಬರ್ 27: ಕರ್ನಾಟಕದ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ. ನವೆಂಬರ್ 13ರಂದು ನಡೆಯುವ ಉಪ ಚುನಾವಣೆಗೆ 26 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯ ತಲೆನೋವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈಗ ಬಂಡಾಯವನ್ನು ಶವಮನಗೊಳಿಸುವಲ್ಲಿ ಸಫಲರಾಗಿದ್ದಾರೆ. ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ.

Shiggaon By Election Relief To Congress Rebel Candidate To Withdraw Nomination

ಡಿ. ಕೆ. ಶಿವಕುಮಾರ್ ಹೇಳಿಕೆ: ಶಿಗ್ಗಾವಿ ಉಪ ಚುನಾವಣೆಗೆ ಯಾಸೀರ್ ಅಹ್ಮದ್ ಖಾನ್ ಪಠಾಣ ಅಭ್ಯರ್ಥಿ ಎಂದು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದರು.

ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಅಜ್ಜಂಪೀರ್‌ ಖಾದ್ರಿ ಜೊತೆ ಸಂಧಾನ ನಡೆಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆದು, ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಇದಕ್ಕೆ ಅಜ್ಜಂಪೀರ್‌ ಖಾದ್ರಿ ಒಪ್ಪಿಯನ್ನೂ ನೀಡಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 30 ಕೊನೆಯ ದಿನ.

ಈ ಕುರಿತು ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿ. ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. "ಕಳೆದ ಬಾರಿಯ ಚುನಾವಣೆಯಲ್ಲಿ ಅಜ್ಜಂಪೀರ್ ಖಾದ್ರಿ ಅವರಿಗೆ ಟಿಕೆಟ್ ಕೊಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಶಿಗ್ಗಾವಿ ಉಪಚುನಾವಣೆಯಲ್ಲಿಯೂ ಅವರ ಹೆಸರು ಪ್ರಮುಖವಾಗಿದ್ದು, ಹೈಕಮಾಂಡ್ ಅವರಿಗೆ ಇದಕ್ಕೆ ಸಮನಾದ ಅಧಿಕಾರವನ್ನು ನೀಡುವ ಭರವಸೆ ನೀಡಿದೆ" ಎಂದರು.

"ಖಾದ್ರಿಯವರು ಪಕ್ಷದ ನಿಲುವಿಗೆ ಬದ್ಧರಾಗಿ ನಮ್ಮ ಜೊತೆ ಇರಲಿದ್ದಾರೆ. ನಾನು ಹಾಗೂ ನಮ್ಮ ಶಾಸಕರು, ಮುಖ್ಯಮಂತ್ರಿಗಳು ಖಾದ್ರಿ ಅವರ ಜೊತೆ ಮಾತನಾಡಿದ್ದು, ಅಕ್ಟೋಬರ್ 30ರಂದು ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿಯ ಬಸವರಾಜ ಬೊಮ್ಮಾಯಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಉಪ ಚುನಾವಣೆ ಎದುರಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಕಳೆದ ಚುನಾವಣೆಯಲ್ಲಿ ಸೋತಿದ್ದ ಯಾಸೀರ್ ಅಹ್ಮದ್ ಖಾನ್ ಪಠಾಣಗೆ ಟಿಕೆಟ್ ನೀಡಿತ್ತು.

ಅಜ್ಜಂಪೀರ್‌ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರನ್ನು ಶಿಗ್ಗಾವಿಗೆ ಕಳಿಸಿತ್ತು. ಶುಕ್ರವಾರ ಅವರು ನಾಮಪತ್ರ ಸಲ್ಲಿಕೆ ಮಾಡದಂತೆ ಮನವೊಲಿಕೆ ಮಾಡಲು ಸೂಚನೆ ನೀಡಿತ್ತು.

ಆದರೆ ಶುಕ್ರವಾರ ಜಮೀರ್ ಅಹ್ಮದ್‌ ಖಾನ್‌ ಇತರ ನಾಯಕರ ಜೊತೆ ಅಜ್ಜಂಪೀರ್‌ ಖಾದ್ರಿ ನಡೆಸಿದ ಮಾತುಕತೆ ವಿಫಲವಾಗಿತ್ತು. ಅಜ್ಜಂಪೀರ್‌ ಖಾದ್ರಿ ಬೆಂಬಲಿಗರು ಜಮೀರ್ ಅಹ್ಮದ್ ಖಾನ್ ಕಾರಿನ ಮೇಲೆ ದಾಳಿ ನಡೆಸಿದ್ದರು. ಗಾಜುಗಳನ್ನು ಒಡೆದು ಹಾಕಿದ್ದರು. ಅಂತಿಮವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಅಜ್ಜಂಪೀರ್‌ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಶನಿವಾರ ಅವರು ಬೆಂಗಳೂರಿಗೆ ಆಗಮಿಸಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+