ರಾಜ್ಯಾದ್ಯಂತ ಶಾಲಾ ಮಕ್ಕಳು, ಶಿಕ್ಷಕರಿಗೆ ವಿಶೇಷ ಸಾರಿಗೆ ಸೌಲಭ್ಯ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಹಾವೇರಿ, ಡಿಸೆಂಬರ್, 05: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾವಿಯಲ್ಲಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲಾ ಪ್ರವಾಸ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಿಗ್ಗಾಂವಿಯಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. NWKSRTC ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಅವರು, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಈ ಯೋಜನೆಯಡಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿಯೇ ಸಮಯಕ್ಕೆ ಸರಿಯಾಗಿ ನಿಗದಿತ ಮಾರ್ಗದಲ್ಲಿ ಬಸ್ ಸೌಲಭ್ಯವನ್ನು ಕಲ್ಪಿಸಿಕೊಡಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಅನುಕೂಲವಾಗಲಿದೆ ಎಂದರು. ಅಲ್ಲದೆ ಈ ಯೋಜನೆಯನ್ನು ತಮ್ಮ ಕ್ಷೇತ್ರದಿಂದಲೇ ಆರಂಭಿಸುವಂತೆ ವಾಯವ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

60 ಕ್ಕಿಂತ ಹೆಚ್ಚು ಪಿಎಚ್ಸಿ ಕೇಂದ್ರಗಳ ಆರಂಭ
ರಾಜ್ಯದಲ್ಲಿ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಕೆಲಸವನ್ನು ಈ ವರ್ಷ ಮಾಡಲಾಗುತ್ತಿದೆ. 60 ಕ್ಕಿಂತ ಅಧಿಕ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ 12 ಹೊಸ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇದೇ ಡಿಸೆಂಬರ್ನಲ್ಲಿ 437 "ನಮ್ಮ ಕ್ಲಿನಿಕ್" ಆರಂಭಿಸಲಾಗುತ್ತಿದೆ. ಕ್ಲಿನಿಕ್ಗಳಲ್ಲಿ ಸಣ್ಣಪುಟ್ಟಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

ಸರ್ಕಾರದಿಂದ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ
ಈ ವರ್ಷ ಒಂದು ಕೋಟಿಗೂ ಅಧಿಕ ಜನರಿಗೆ ಆಯುಷ್ಮಾನ್ ಕಾರ್ಡ್ ಕೊಡಲಾಗುತ್ತಿದೆ. ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿದೆ. ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಹೆಚ್ಚು ಆದ್ಯತೆಯನ್ನು ನೀಡಿದೆ. ಹಾವೇರಿ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಹುಬ್ಬಳ್ಳಿಯಲ್ಲಿ 360 ಕೋಟಿ ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಗೆ ಮುಂದಿನ ತಿಂಗಳು ಅಡಿಗಲ್ಲು ಹಾಕಲಾಗುವುದು. ಅಲ್ಲದೆ ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಪ್ರಮುಖ ಘಟಕ ಆರಂಭಿಸಲಾಗುವುದು ಎಂದು ಹೇಳಿದರು.

ಹಾವೇರಿಯಲ್ಲಿ ವೈದ್ಯಕೀಯ ಸೀಟುಗಳ ಹಂಚಿಕೆ
ಸವಣೂರ ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿಗೆ 15 ದಿನಗಳಲ್ಲಿ ಅಡಿಗಲ್ಲು ಹಾಕಲಾಗುವುದು. ಈಗಾಗಲೇ ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಈಗಾಗಲೇ ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡಿದ್ದು, ಬರುವ ಫೆಬ್ರವರಿ ಅಥವಾ ಮಾರ್ಚ್ ವೇಳೆಗೆ ಕಾಲೇಜು ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾವೇರಿಯಲ್ಲಿ ಮುಂದಿನ ದಿನಗಳಲ್ಲಿ 400 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ. ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ನಮ್ಮ ಸರ್ಕಾರ ಸ್ಪಂದಿಸಿ ಕಾಯಕಲ್ಪ ನೀಡುವ ಕೆಲಸ ಮಾಡಿದೆ ಎಂದರು.
ಈ ವೇಳೆ ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪಟ್ಟಣಗಳಲ್ಲಿ ಬಹುದೊಡ್ಡ ಬದಲಾವಣೆ
ಇನ್ನು ಭವಿಷ್ಯದಲ್ಲಿ ಶಿಗ್ಗಾವಿ, ಸವಣೂರು ಪಟ್ಟಣಗಳಲ್ಲಿ ಬಹುದೊಡ್ಡ ಬದಲಾವಣೆ ಆಗಲಿದೆ. ಬರುವ ದಿನಗಳಲ್ಲಿ ಅವಳಿ ಪಟ್ಟಣಗಳು ಪ್ರಮುಖ ವಾಣಿಜ್ಯ ಕೇಂದ್ರಗಳಾಗಿ ಬೆಳೆಯಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿ ಪಟ್ಟಣಕ್ಕೆ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಆಹ್ವಾನಿಸಲಾಗಿದೆ ಎಂದರು. ಈಗಾಗಲೇ ಜವಳಿ ಪಾರ್ಕ್, ದೊಡ್ಡ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆ ಆಗುತ್ತಿವೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ಕಾಲ ಬದಲಾಗಿದೆ, ಭೂಮಿ ಕಡಿಮೆಯಾಗಿದೆ, ನಾವು ನಾವು ಬೇರೆ ಬೇರೆ ವೃತ್ತಿಯಲ್ಲಿ ತೊಡಗಿದಾಗ ಮಾತ್ರ ಭವಿಷ್ಯದಲ್ಲಿ ಬದುಕಲು ಸಾಧ್ಯವಾಗುತ್ತದೆ ಎಂದು ಯುವಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.












Click it and Unblock the Notifications