ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿನ ಕಾರಣ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ!
ಹಾವೇರಿ, ಅಕ್ಟೋಬರ್ 22; "ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ಪ್ರತಿ ಪಕ್ಷದಲ್ಲಿ ಕೂರಿಸಿದ್ದಾರೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಶುಕ್ರವಾರ ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿಗಳ ಮಾತನಾಡಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಶಿವರಾಜ್ ಸಜ್ಜನರ ಪರವಾಗಿ ಮತಯಾಚನೆ ಮಾಡಿದರು.
ಹಾನಗಲ್; ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ ಸಿದ್ದರಾಮಯ್ಯ
"ಅನ್ನಭಾಗ್ಯ ಯೋಜನೆ ಜಾರಿ ಮಾಡಿದ ನಂತರವೇ ಜನ ಅಕ್ಕಿ ನೋಡಿದ್ದಾರೆ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಅಕ್ಕಿಯಲ್ಲಿ ಕೇಂದ್ರದ ಪಾಲು ಹೆಚ್ಚು. ರಾಜ್ಯ ಸರ್ಕಾರದ ಪಾಲು ಪ್ರತಿ ಕೆಜಿಗೆ ಕೇವಲ 3 ರೂಪಾಯಿ. ಆದರೆ ಅನ್ನಭಾಗ್ಯ ಯೋಜನೆ ತಮ್ಮದೆಂದು ಹೇಳಿಕೊಳ್ಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ" ಎಂದು ಆರೋಪಿಸಿದರು.
ಆರ್ಎಸ್ಎಸ್ ಕಂಡರೆ ನನಗ್ಯಾಕೆ ಭಯ?; ಸಿದ್ದರಾಮಯ್ಯ
"ಕಾಂಗ್ರೆಸ್ ಸರ್ಕಾರ ರೈತರ ಪರವಾಗಿರಲಿಲ್ಲ, ರೈತರನ್ನು ಉದ್ಧಾರ ಮಾಡುವ ಮನಸ್ಥಿತಿ ಅವರಿಗಿಲ್ಲ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುವುದೇ ಕಾಂಗ್ರೆಸ್ ಕೆಲಸ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಹಾನಗಲ್; ಬಿಜೆಪಿ ಬಂಡಾಯ ಶಮನ, ನಾಮಪತ್ರ ವಾಪಸ್
ಡಿಕೆಶಿ ಅನುಭವದ ಮಾತು; "ಉಪಚುನಾವಣೆಯಲ್ಲಿ ಕಾಂಗ್ರೆಸ್ನವರು ಈ ಹಿಂದೆ ಗೆದ್ದಾಗಲೆಲ್ಲ ಸಂಘಟನೆಯಿಂದ ಗೆದ್ದಿದ್ದೇವೆ ಎಂದು ಬೀಗುತ್ತಿದ್ದರು. ಅದೇ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಜಯಗಳಿಸಿದರೆ ಅದು ಹಣದಿಂದ ಎಂದು ಡಿ. ಕೆ. ಶಿವಕುಮಾರ್ ಆರೋಪಿಸುತ್ತಾರೆ. ಅವರು ಹತಾಶರಾಗಿದ್ದಾರೆ. ಸೋಲಿನ ಭಯದಿಂದ ಈ ತರಹದ ಮಾತುಗಳನ್ನು ಆಡುತ್ತಿದ್ದಾರೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
"ಹಾನಗಲ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಜನಶಕ್ತಿ ನಮ್ಮೊಂದಿಗಿದೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗೆ ಗೆಲುವು ಖಚಿತ ಇದೇ ಕಾರಣಕ್ಕಾಗಿ ಗಾಬರಿಯಿಂದ ಕಾಂಗ್ರೆಸ್ ಪಕ್ಷದವರು ಮಾತನಾಡುತ್ತಿದ್ದಾರೆ" ಎಂದು ತಿಳಿಸಿದರು.
"ವಿರೋಧ ಪಕ್ಷದ ಎಲ್ಲ ಟೀಕೆ-ಟಿಪ್ಪಣಿಗಳಿಗೆ ನಾನು ಉತ್ತರಕೊಡಲು ಬಯಸುವುದಿಲ್ಲ. ನಮ್ಮ ಮೂಲಮಂತ್ರ ಅಭಿವೃದ್ಧಿಯಾಗಿದೆ. ಕಾಂಗ್ರೆಸ್ ಪಕ್ಷದವರು ತಮಗೆ ಬೇಕಾದ ಅಜೆಂಡಾ ಇಟ್ಟುಕೊಳ್ಳಲಿ. ಆದರೆ ಭಾರತೀಯ ಜನತಾ ಪಕ್ಷದ ಏಕೈಕ ಅಜೆಂಡಾ ಅಭಿವೃದ್ಧಿ. ಕಾಂಗ್ರೆಸ್ ಪಕ್ಷ ಮಾಡುವಂತಹ ಎಲ್ಲ ಟೀಕೆಗಳಿಗೆ ಹಾನಗಲ್ ಕ್ಷೇತ್ರದ ಜನರು ಉತ್ತರ ಕೊಡಲಿದ್ದಾರೆ" ಎಂದರು.
ನಮಗೆ ಗೆಲುವು ನಿಶ್ಚಿತ; "ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ಯಡಿಯೂರಪ್ಪ ಕಾಲಿಟ್ಟಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ" ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
"ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪನವರು ಪರಿಚಯಿಸಿದ ಎಲ್ಲಾ ಯೋಜನೆಗಳ ಹಿಂದೆ ಬಲವಾದ ಸಾಮಾಜಿಕ ಅಭಿವೃದ್ಧಿಗೆ ಕಳಕಳಿ ಮತ್ತು ಕಾಳಜಿ ಇತ್ತು" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಜನಪರ ಕಾಳಜಿ ಹೆಚ್ಚು; "ಭಾರತೀಯ ಜನತಾ ಪಕ್ಷದ ಸರ್ಕಾರವಿದ್ದಾಗ ಜನಪರ ಕಾಳಜಿ ಹೆಚ್ಚಿತ್ತು. ಜನರಿಗೆ ಅಗತ್ಯದ ಯೋಜನೆಗಳು ಸರಕಾರ ರೂಪಿಸಿತು ಅಲ್ಲದೆ ಮನೆಗೆ ತಲುಪುವಂತೆ ನೋಡಿಕೊಂಡಿತು. ಹೆಣ್ಣು ಮಕ್ಕಳು ಹುಟ್ಟಿದರೆ ಶಾಪ ಅನ್ನುವಂತಹ ಕಾಲದಲ್ಲಿ ಯಡಿಯೂರಪ್ಪನವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಪರಿಚಯಿಸಿದರು. ಇಡೀ ಭಾರತದಲ್ಲಿಯೇ ಮೊಟ್ಟಮೊದಲ ಬಾರಿಗೆ ಯೋಜನೆಯನ್ನು ಪರಿಚಯಿಸಿದ ಹೆಮ್ಮೆ ಭಾರತೀಯ ಜನತಾ ಪಕ್ಷದ ಸರ್ಕಾರದ್ದು" ಎಂದು ಬಸವರಾಜ ಬೊಮ್ಮಾಯಿ ಬಣ್ಣಿಸಿದರು.
"ನಮ್ಮ ರೈತರು ಅಭಿವೃದ್ಧಿ ಹೊಂದಬೇಕು, ಹಣ ಗಳಿಸಬೇಕು, ಕಾಲಿನಲ್ಲಿ ಜೂರ್ಕಿ ಚಪ್ಪಲಿ, ರೇಷ್ಮೆ ಜುಬ್ಬಾ ಹಾಕಬೇಕು, ರೇಷ್ಮೆ ರುಮಾಲು ಹಾಕಬೇಕು, ಕೈಯಲ್ಲಿ ಬಾರಕೋಲು ಹಿಡಿದುಕೊಳ್ಳಬೇಕು ಇದು ಭಾರತೀಯ ಜನತಾ ಪಕ್ಷದ ಅಭಿವೃದ್ಧಿಯ ಕನಸು. ರೈತ ಜೀವನ ಸುಧಾರಿಸುವುದೇ ನಮ್ಮ ಉದ್ದೇಶ, ರೈತನ ಬಾಳು ಆಗಬೇಕು ಎಂಬುದಾಗಿದೆ" ಎಂದರು.
Recommended Video
ಅಕ್ಟೋಬರ್ 30ರಂದು ಹಾನಗಲ್ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಶುಕ್ರವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ.