ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಪ್ಲಾನ್: ಪ್ರಹ್ಲಾದ್ ಜೋಶಿ ಭರವಸೆ
ಹುಬ್ಬಳ್ಳಿ, ಜನವರಿ, 03: ಬೆಂಗಳೂರಿನಲ್ಲಿರುವ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗಾಗಲೇ ಹಲವು ವಿನ್ಯಾಸಗಳನ್ನು ಪಡೆಯುವ ಮೂಲಕ ಪ್ರಖ್ಯಾತಿಯನ್ನು ಪಡೆದಿದೆ. ಹಾಗೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ತೀರ್ಮಾನ ಮಾಡಲಾಗಿದೆ. ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸಂಬಂಧಿಸಿದ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಉನ್ನತೀಕರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಕಾರ್ಯವನ್ನು ಈಗಾಗಲೇ ಸರಕಾರದಿಂದ ನಡೆಸಲಾಗಿದೆ. ರಾಜ್ಯದ ಎರಡನೇ ಅತೀದೊಡ್ಡ ನಗರವಾಗಿರುವ ಹಾಗೂ ಹುಬ್ಬಳ್ಳಿ-ಧಾರವಾಡ ದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ ಮತ್ತು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾಯಾರಂಭ ಮಾಡಲಾಗುವುದು. ಜೊತೆಗೆ ವಿಮಾನ ಪ್ರಯಾಣಿಕರ ಸಂಖ್ಯೆಯು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣವನ್ನು ಹೆಚ್ಚಳ ಮಾಡಲಾಗುವುದು. ಈ ಮೂಲಕ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿರುವ ವಿಮಾನ ಆಗಮನ - ನಿರ್ಗಮನ ಮಾದರಿಯಲ್ಲಿ ವ್ಯವಸ್ಥೆ ಮಾಡಲು ಮತ್ತೊಂದು ಹೊಸ ಟರ್ಮಿನಲ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಜಿಟಿಟಿಸಿ ಸ್ಥಾಪಿಸಿದ 20 ಕೋಟಿಯ 'ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ'ಕ್ಕೆ ಅಶ್ವಥ್ ನಾರಾಯಣ ಚಾಲನೆ
ಸ್ಪಂದನೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧ್ಯಾ
ಈ ಎಲ್ಲ ಕಾರ್ಯಗಳನ್ನು ಕೈಗೊಳ್ಳಲು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಹಾಗೂ ಅವರಿಗೆ ಈ ಬಗ್ಗೆ ಪತ್ರವನ್ನು ಬರೆದು ಒತ್ತಾಯಿಸಲಾಗಿದೆ ಎಂದರು. ಇನ್ನು ರನ್ವೇ ವಿಸ್ತೀರ್ಣ ಹಾಗೂ ಕಾರ್ಗೋ ನಿರ್ವಹಣಾ ಸುಧಾರಣೆ ಮುಂತಾದ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಕಳೆದ ತಿಂಗಳಷ್ಟೇ ಪತ್ರವನ್ನು ಬರೆಯಲಾಗಿತ್ತು. ನಾವು ಕಳುಹಿಸಿದ ಪತ್ರಕ್ಕೆ ವಿಮಾನಯಾನ ಸಚಿವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವ ಪ್ಲಾನ್
ಕೈಗಾರಿಕಾ ಹೂಡಿಕೆ ಮಾತ್ರವಲ್ಲದೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ರಫ್ತು ಚಟುವಟಿಕೆ, ಉನ್ನತ ಶಿಕ್ಷಣದ ಅವಕಾಶಗಳ ವಿಸ್ತರಣೆ ಹಾಗೂ ಮತ್ತಿತರ ಅಭಿವೃದ್ಧಿ ದೃಷ್ಟಿಯಿಂದಲೂ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲೂ ಈಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸುವ ಬಗ್ಗೆ ವಿಮಾನ ಯಾನ ಸಚಿವರಿಗೆ ತಿಳಿಸಲಾಗಿದೆ. ಈ ಎಲ್ಲ ಕ್ಷೇತ್ರಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವುದು ಸೂಕ್ತ ಎಂದು ಒತ್ತಾಯಿಸಲಾಗಿದೆ ಎಂದರು.
ವಿಮಾನ ನಿಲ್ದಾಣದ ಸಮಗ್ರ ಅಭಿವೃದ್ಧಿ
ಈ ವ್ಯವಸ್ಥೆಯು ಒಂದೇ ಸಮಯಕ್ಕೆ 300 ಪ್ರಯಾಣಿಕರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿರುತ್ತದೆ. ಇದರೊಂದಿಗೆ ಇಪ್ಪತ್ತು ಸಾವಿರ ಚೌರಸ ಮೀಟರ್ ಗಾತ್ರದ 1400 ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯದ 4 ಏರೋಬ್ರಿಜ್ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ ಪರಿವರ್ತಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ರನ್ ವೇ ಹೆಚ್ಚಳ ಹಾಗೂ ಈಗಿರುವ ಅಪ್ರಾನ್ ಗಾತ್ರದ ಹೆಚ್ಚಳ ಸೇರಿದಂತೆ ಸಮಗ್ರವಾಗಿ ನಿಲ್ದಾಣದ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ
ವಿಮಾನ ನಿಲ್ದಾಣ ಅಭಿವೃದ್ಧಿ ಆದರೆ ಸಹಜವಾಗಿಯೇ ಕೃಷಿ ಮತ್ತು ಕೈಗಾರಿಕೆ ಕ್ಷೇತ್ರಗಳಲ್ಲಿ ಬಂಡವಾಳ ಹೂಡುವವರು ಇನ್ನಷ್ಟು ಆಸಕ್ತಿಯನ್ನು ಹೊಂದುತ್ತಾರೆ. ಈ ಮೂಲಕ ರಾಜಧಾನಿ ಬೆಂಗಳೂರಿನ ಮೇಲೆ ಕೇಂದ್ರೀಕೃತವಾಗಿರುವ ಜನರ ಗಮನ ಉತ್ತರ ಕರ್ನಾಟಕದ ಹೆಬ್ಬಾಗಿಲೆಂದೇ ಖ್ಯಾತಿ ಹೊಂದಿರುವ ಹುಬ್ಬಳ್ಳಿ ನಗರದ ಮೇಲೆ ಬೀಳುತ್ತದೆ. ಅಲ್ಲದೆ ಉದ್ದಿಮೆದಾರರು ಹೆಚ್ಚಾಗಿ ಬಂಡವಾಳವನ್ನು ಹೂಡಲು ಆಸಕ್ತಿ ತೋರುತ್ತಾರೆ. ಇದರಿಂದ ಆ ಪ್ರದೇಶ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಇದಲ್ಲದೆ, ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದರು.