ಜೋಶಿ ನಿವಾಸದಲ್ಲಿ ಉಪಹಾರ ಸೇವಿಸಿ ದೆಹಲಿಗೆ ಅಮಿತ್ ಶಾ ವಾಪಸ್
ಹುಬ್ಬಳ್ಳಿ, ಜನವರಿ 19 : ಕರ್ನಾಟಕದ ಪ್ರವಾಸ ಮುಗಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ವಾಪಸ್ ಆದರು. ಶನಿವಾರ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಭಾನುವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಅಮಿತ್ ಶಾ ದೆಹಲಿಗೆ ಪ್ರಯಾಣ ಬೆಳೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಮಿತ್ ಶಾ ಅವರನ್ನು ಬೀಳ್ಕೊಟ್ಟರು.
ಜನವರಿ 18ರ ಶನಿವಾರ ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಸಮಾವೇಶ ಉದ್ದೇಶಿಸಿ ಅಮಿತ್ ಶಾ ಮಾತನಾಡಿದ್ದರು. ಬಳಿಕ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ದೆಹಲಿಗೆ ವಾಪಸ್ ತೆರಳಿದರು.

ಭಾನುವಾರ ಬೆಳಗ್ಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಅಮಿತ್ ಶಾ ಭೇಟಿ ನೀಡಿದರು. ಜೋಶಿ ಕುಟುಂಬಸ್ಥರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಅಮಿತ್ ಶಾ ನಳಿನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರ ಜೊತೆ ಉಪಹಾರ ಸೇವಿಸಿದರು. ಅವಲಕ್ಕಿ, ಉಪ್ಪಿಟ್ಟು, ಪೂರಿ ಸೇವಿಸಿದ ಅವರು ಜೋಶಿ ನಿವಾಸದ ಮುಂದೆ ಸೇರಿದ್ದ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಬಳಿಕ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಹುಬ್ಬಳ್ಳಿಗೆ ತೆರಳಿದ್ದರು.
ಅಮಿತ್ ಶಾ ದೆಹಲಿಗೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಗುವಿಗೆ ಪೋಲಿಯೋ ಡ್ರಾಪ್ ಹಾಕುವ ಮೂಲಕ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.












Click it and Unblock the Notifications