ಕಾಂಗ್ರೆಸ್ನಿಂದ ದಿಂಬು, ಹಾಸಿಗೆ, ಬಿಸ್ಕೆಟ್, ಕಾಫಿ ವಿಚಾರದಲ್ಲೂ ಭ್ರಷ್ಟಾಚಾರ: ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ನವರು ದಿಂಬು, ಹಾಸಿಗೆ, ಬಿಸ್ಕೆಟ್, ಕಾಫಿ ವಿಚಾರದಲ್ಲೂ ಭ್ರಷ್ಟಾಚಾರವನ್ನು ಬಿಟ್ಟಿಲ್ಲ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿ, ಮಾರ್ಚ್, 06: ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ಸಿನ "ಕೈ" ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಜನ ಈ ಬಂದ್ ಕರೆಗೆ ಬೆಂಬಲ ನೀಡುವುದಿಲ್ಲ. ಆಪಾದನೆ ಮಾಡುವವರು ಮೊದಲು ಶುದ್ಧ ಹಸ್ತರೀರಬೇಕು. ಅವಾಗ ಅದಕ್ಕೆ ಬೆಲೆ ಬರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ನಿಂದ ಮಾರ್ಚ್ 9ರಂದು ಕರ್ನಾಟಕ ಬಂದ್ ಕರೆ ವಿಚಾರವಾಗಿ ಹುಬ್ಬಳ್ಳಿ ನಿವಾಸದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ದಿಂಬು, ಹಾಸಿಗೆಯನ್ನೂ ಬಿಟ್ಟಿಲ್ಲ. ಬಿಸ್ಕೆಟ್, ಕಾಫಿಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ಹೀಗೆ ಕಾಂಗ್ರೆಸ್ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ
ಎಂ.ಬಿ.ಪಾಟೀಲ್, ಜಾರ್ಜ್, ಮಹದೇವಪ್ಪಗೆ ಕೇಳಬೇಕು ಸಿದ್ಧರಾಮಯ್ಯ ಎಷ್ಟೆಲ್ಲ ಟಾರ್ಗೆಟ್ ಕೊಟ್ಟಿದ್ದರು ಅಂತಾ. ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದರೆ ನಡೆಯುವುದಿಲ್ಲ. ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ. ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ?
ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ? ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆದುಕೊಳ್ಳಬಹುದು ಎನ್ನುವುದು ಮೂರ್ಖತನ. ಚುನಾವಣಾ ಅಖಾಡವಿದೆ, ಅಲ್ಲಿ ಜನರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಹಾಗೆಯೇ ಬೆಳಗಾವಿ ರಾಜಹಂಸಗಡದಲ್ಲಿ ಕಾಂಗ್ರೆಸ್ನಿಂದ ಶಿವಾಜಿ ಪ್ರತಿಮೆಯನ್ನು ಮರು ಉದ್ಘಾಟನೆ ಪ್ರಕರಣದ ಕುರಿತು ಮಾತನಾಡಿದ ಅವರು, ಇದೊಂದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದರು.

ಕಾಂಗ್ರೆಸ್ನಿಂದ ಒಣ ಪ್ರತಿಷ್ಠೆ
ಸರ್ಕಾರವೇ ಬಂದು ಮೂರ್ತಿ ಉದ್ಘಾಟನೆ ಮಾಡಿದ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಸರ್ಕಾರದಿಂದ ಉದ್ಘಾಟನೆ ಮಾಡಿದ ನಂತರ ಒಣ ಪ್ರತಿಷ್ಠೆಗಾಗಿ ಈ ರೀತಿ ಮಾಡಲಾಗಿದೆ. ರಾಷ್ಟ್ರನಾಯಕರ ಹೆಸರಿನಲ್ಲಿ ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಐಎಸ್ಕೆಪಿ ಹೊಣೆಹೊತ್ತ ವಿಚಾರವಾಗಿ ಮಾತನಾಡಿದ ಅವರು, ಈಗ ಡಿ.ಕೆ. ಶಿವಕುಮಾತ್ ಏನು ಹೇಳುತ್ತಾರೆ ಎಂದು ಕೇಳಬೇಕು. ಡಿ.ಕೆ. ಶಿವಕುಮಾರ್ ಬರೀ ಸಾಧಾ ಕುಕ್ಕರ್ ಅಂತಾ ಹೇಳಿದ್ದರು. ಬಿಜೆಪಿಯವರು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತಲೂ ಹೇಳಿದ್ದರು. ಈಗ ಈ ವಿಚಾರಕ್ಕೆ ಅವರು ಏನು ಹೇಳುತ್ತಾರೆ ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications