ಖಾಲಿಯಿಲ್ಲದ ಸಿಎಂ ಕುರ್ಚಿಗೆ ಡಿಕೆಶಿ, ಸಿದ್ದರಾಮಯ್ಯ ನಾಮುಂದು ತಾಮುಂದು..
ಹುಬ್ಬಳ್ಳಿ, ಅ 27: ಬಿಜೆಪಿ ಸರಕಾರ ಸುಭದ್ರವಾಗಿದೆ, ಎರಡು ಅಸೆಂಬ್ಲಿ ಉಪಚುನಾವಣೆ ಮತ್ತು ನಾಲ್ಕು ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾತನಾಡುತ್ತಿದ್ದ ಶೆಟ್ಟರ್, "ಖಾಲಿ ಇಲ್ಲದ ಮುಖ್ಯಮಂತ್ರಿ ಕುರ್ಚಿಗಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದೆ"ಎಂದು ಸಚಿವರು ಅಭಿಪ್ರಾಯ ಪಟ್ಟರು.
"ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತವಿಲ್ಲ, ಹಾಗಾಗಿ ಉತ್ತಮ ಮಸೂದೆಯನ್ನು ಆಂಗೀಕರಿಸಲು ಸಾಧ್ಯವಾಗುತ್ತಿಲ್ಲ. ಈಗ, ನಾಲ್ಕು ಸ್ಥಾನವನ್ನು ಗೆದ್ದು ಆ ಕೊರತೆಯನ್ನು ನೀಗಿಸಿಕೊಳ್ಳುತ್ತೇವೆ"ಎಂದು ಜಗದೀಶ್ ಶೆಟ್ಟರ್ ಹೇಳಿದರು.

"ನಾನು ಮತ್ತೆ ಮುಖ್ಯಮಂತ್ರಿಯಾದರೆ ಹತ್ತು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇತ್ತ, ಡಿ.ಕೆ.ಶಿವಕುಮಾರ್ ಬೆಂಬಲಿಗರು ಅವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಕಾಂಗ್ರೆಸ್ಸಿನಲ್ಲಿ ಹೊಂದಾಣಿಕೆಯ ಕೊರತೆಯಿದೆ"ಎಂದು ಶೆಟ್ಟರ್ ಹೇಳಿದರು.
"ಬಿಜೆಪಿ ಮುಖಂಡ ಬಸವನೌಡ ಯತ್ನಾಳ್ ಅವರ ಹೇಳಿಕೆ ಅವರ ವೈಯಕ್ತಿಕವಾದದ್ದು. ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ, ಮುಂದಿನ ಪೂರ್ಣ ಅವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು"ಎಂದು ಜಗದೀಶ್ ಶೆಟ್ಟರ್ ಸ್ಪಷ್ಟ ಪಡಿಸಿದರು.
"ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಹೇಳಹೆಸರಿಲ್ಲದಂತೆ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಇನ್ನು, ಜೆಡಿಎಸ್ ಬಗ್ಗೆ ಹೆಚ್ಚಿನ ಮಾತು ಅನವಶ್ಯಕ. ರಾಜ್ಯ ಕಾಂಗ್ರೆಸ್ ನಲ್ಲಿ ಇಬ್ಬರು ನಾಯಕರು ಸಿಎಂ ಕುರ್ಚಿಯ ಕನಸನ್ನು ಕಾಣುತ್ತಿದ್ದಾರೆ"ಎಂದು ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು.












Click it and Unblock the Notifications