ಕುತೂಹಲ ಮೂಡಿಸಿದ ವಿಜಯೇಂದ್ರ, ಶೆಟ್ಟರ್ ಭೇಟಿ!
ಹುಬ್ಬಳ್ಳಿ, ಮಾರ್ಚ್ 14; ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ನವ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು. ದೆಹಲಿಯಿಂದ ವಾಪಸ ಆದ ಬಳಿಕ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ಮಾಡಿದರು.
ಬಿ. ವೈ. ವಿಜಯೇಂದ್ರ ಭಾನುವಾರ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಶ್ರೀಕ್ಷೇತ್ರ ಮಣಕವಾಡ ಗ್ರಾಮದ ಶ್ರೀಗುರು ಅನ್ನದಾನೀಶ್ವರ ದೇವಮಂದಿರದಲ್ಲಿ ನಡೆದ ಮಹಾ ತಪಸ್ವಿ ಮ.ನಿ.ಪ್ರ. ಲಿಂಗೈಕ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳ ಅಜ್ಜನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮಕ್ಕಾಗಿಯೇ ಹುಬ್ಬಳ್ಳಿಗೆ ಬಂದಿದ್ದ ಬಿ. ವೈ. ವಿಜಯೇಂದ್ರ ದಿಢೀರ್ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದರು. ಹುಬ್ಬಳ್ಳಿಯ ಕೇಶವಾಪುರದ ಮಾಧುರಾ ಎಸ್ಟೇಟ್ನಲ್ಲಿರುವ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವಿಜಯೇಂದ್ರ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದರು.

ಐದು ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬರುತ್ತಲೇ ದೆಹಲಿಗೆ ತೆರಳಿದ್ದ ಬಿ. ವೈ. ವಿಜಯೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದ್ದರು. ಅಲ್ಲಿಂದ ಆಗಮಿಸಿದ ಅವರು ಜಗದೀಶ್ ಶೆಟ್ಟರ್ ಭೇಟಿ ಮಾಡಿದ್ದು ಕುತೂಹಲ ಕೆರಳಿಸಿದೆ.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿಯೇ ಬಿ. ವೈ. ವಿಜಯೇಂದ್ರ ಜಗದೀಶ್ ಶೆಟ್ಟರ್ ಭೇಟಿಯಾಗಿ ಮುಂದಿನ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ನಿರಾಕರಿಸಿದ್ದರು. ಬಿ. ವೈ. ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬ ಸುದ್ದಿಗಳು ಹಬ್ಬಿತ್ತು. ಆದರೆ ಅವರು ಸಂಪುಟ ಸೇರಿರಲಿಲ್ಲ.
ಬಿಜೆಪಿ ಕಾರ್ಯಕಾರಣಿ ಸಭೆ; 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಜಯಗಳಿಸಿದೆ. ಇದೇ ಉತ್ಸಾಹದಲ್ಲಿ ಕರ್ನಾಟಕದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹಬ್ಬಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ನಡೆಯುವುದಿಲ್ಲ" ಎಂದು ಸ್ಪಷ್ಟಪಡಿಸಿದರು.
"ಸಂಪುಟ ವಿಸ್ತರಣೆ ಕುರಿತು ವರಿಷ್ಠರಿಂದ ಸೂಚನೆ ಬಂದ ತಕ್ಷಣ ದೆಹಲಿಗೆ ಹೋಗುತ್ತೇನೆ" ಎಂದು ಹೇಳಿದರು.
"ಮಾರ್ಚ್ 30, 31ರಂದು ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ರಾಜ್ಯ ಪ್ರವಾಸ ಸೇರಿದತೆ ಎಲ್ಲಾ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ" ಎಂದರು.












Click it and Unblock the Notifications