10-15 ಜನ ಸಾವನ್ನಪ್ಪಿದ್ರೆ ಗೃಹ ಸಚಿವರಿಗೆ ಇದು ದೊಡ್ಡ ಘಟನೆ ಆಗ್ತಿತ್ತು- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಸೆಪ್ಟೆಂಬರ್ 13: ಮಂಡ್ಯದ ನಾಗಮಂಗಲ ಬದರಿಕೊಪ್ಪಲಿದಲ್ಲಿ ಸೆಪ್ಟೆಂಬರ್ 11 ಬುಧವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಯುವಕರ ಗುಂಪೊಂದು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬಂದ ವೇಳೆ ಈ ಘಟನೆ ನಡೆದಿದೆ.
ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ತಳ್ಳಾಟ ನೂಕಾಟ ನಡೆದಿದ್ದು ದೊಡ್ಡ ಗಲಭೆ ಎದ್ದಿದೆ. ಕೆಲವು ಕಿಡಿಗೇಡಿಗಳು ಲಾಂಗು, ತಲ್ವಾರ್ಗಳನ್ನು ಪ್ರದರ್ಶಿಸಿದ್ದಲ್ಲದೇ ರಸ್ತೆಯಲ್ಲೇ ಬರುತ್ತಿದ್ದ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಪುಂಡರನ್ನು ಬಂಧಿಸಿ ಮಾರಕಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 14ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲ ಗಲಾಟೆಯಲ್ಲಿ 10-15 ಜನ ಸಾವನ್ನಪ್ಪಿದ್ದರೆ ಆಗ ಗೃಹ ಸಚಿವರಿಗೆ ಇದು ದೊಡ್ಡ ಘಟನೆ ಆಗುತ್ತಿತ್ತು ಅನಿಸುತ್ತದೆ ಎಂದು ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದರು.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ಚಿಲ್ಲರೆ ಓಟ್ ಬ್ಯಾಂಕ್ಗಾಗಿ ಮತಾಂಧ ಶಕ್ತಿಗಳನ್ನು ಬೆಳೆಸುತ್ತಿದೆ. ನನಗೆ ಪೊಲೀಸರ ಮೇಲೆ ನಂಬಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮೇಲೆ ಭರವಸೆ ಇಲ್ಲ ಎಂದರು.

ಗಲಾಟೆಯಲ್ಲಿ ಪಾಲ್ಗೊಂಡವರು ಕಾಂಗ್ರೆಸ್ ಸರ್ಕಾರದಲ್ಲಿ ರಕ್ಷಣೆ ಇದೆ ಅಂತ ಭಾವಿಸಿದ್ದಾರೆ. ಹಳೇ ಹುಬ್ಬಳ್ಳಿ ಗಲಾಟೆಯಾದಾಗ 200ಕ್ಕೂ ಅಧಿಕ ಜನರು ಎರಡು ವರ್ಷ ಜೈಲಿನಲ್ಲಿಯೇ ಇದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೇ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದರು. ಇದರ ಜೊತೆಗೆ ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಸಹ ಇದೇ ರೀತಿ ಆಗಿದೆ ಎಂದರು.
ಇಡೀ ರಾಜ್ಯ ಸರ್ಕಾರ ರಾಹುಲ್ ಗಾಂಧಿಯವರ ಅಣತಿಯಂತೆ ನಡೆಯುತ್ತಿದೆ. ಇಡೀ ಭಾರತವನ್ನೇ ಸಂಶಯ ದೃಷ್ಟಿಯಿಂದ ನೋಡುವಂತಹ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ದೇಶವನ್ನು ಒಡೆಯುವ ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಾಗ ಅವರಿಗೆ ಮತ್ತಷ್ಟು ಪುಷ್ಟಿ ಸಿಗುತ್ತದೆ ಎಂದು ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.












Click it and Unblock the Notifications