'ಸಿದ್ದರಾಮಯ್ಯ ಅವರೇ, ಮುಡಾ ಚಲೋ ಮಾಡಿ..ಕೈಮುಗಿದು ನನ್ನದು ತಪ್ಪಾಗಿದೆ ಎಂದು ಹೇಳಿ'
ಹುಬ್ಬಳ್ಳಿ, ಆಗಸ್ಟ್ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೂ ರಾಜಭವನ ಚಲೋ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ನಾಯಕರ ಈ ಪ್ರತಿಭಟನೆಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದು, ಕಾಂಗ್ರೆಸ್ನವರು ಮೊದಲು ಮುಡಾ ಚಲೋ ಅಭಿಯಾನ ಮಾಡಲಿ ಎಂದು ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದಾಗಿ ಅಸ್ತವ್ಯಸ್ತತೆ ಉಂಟಾಗಿದೆ. ಜನರ ಮೇಲೆ ಯಾವುದೇ ಕಾಳಜಿ ಇಲ್ಲದ ರಾಜ್ಯ ಸರ್ಕಾರ ರಾಜಕೀಯ ಡೊಂಬರಾಟದಲ್ಲಿ ಮುಳಗಿ ಹೋಗಿದೆ. ರಾಜ್ಯ ಸರ್ಕಾರ ಮಾತ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಜನರು ಕಾಂಗ್ರೆಸ್ ಕಲ್ಯಾಣಕ್ಕಾಗಿ 136 ಸೀಟ್ ಕೊಟ್ಟು ಅಧಿಕಾರಕ್ಕೆ ತಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಯಾವ ರೀತಿಯಾಗಿ ವರ್ತನೆ ಮಾಡುತ್ತಿದೆ ಎಂಬುದನ್ನು ಸ್ವತಃ ಕಾಂಗ್ರೆಸ್ನವರೇ ಆತ್ಮವಲೋಕನ ಮಾಡಿಕೊಳ್ಳಬೇಕು ಎಂದರು.
ಸಿಎಂ ಸಿದ್ದರಾಮಯ್ಯ ಅವರೇ ನೀವು ಯಾಕೆ ರಾಜಭವನ ಚಲೋ ಮಾಡಿತ್ತೀರಿ, ಮುಡಾ ಚಲೋ ಮಾಡಿ, ಅಲ್ಲಿ ಹೋಗಿ ಕೈಮುಗಿದು ನಂದು ತಪ್ಪಾಗಿದೆ ಎಂದು ಹೇಳಿ, ರಾಜಭವನ ಚಲೋ ಅಕ್ಷಮ್ಯ ಅಪರಾಧ, ರಾಜ್ಯಪಾಲರು ತನಿಖೆಗೆ ಸೂಚನೆ ಕೊಟ್ಟಿದ್ದಕ್ಕೆ ಇವರೇಕೆ ಹೆದರುತ್ತಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.

ರಾಜೀನಾಮೆ ಕೊಡುವುದು ಬಿಡುವುದು ಕಾಂಗ್ರೆಸ್ ಸರ್ಕಾರಕ್ಕೆ ಬಿಟ್ಟಿದ್ದು. ನಿಮಗೂ ಕೇಜ್ರಿವಾಲ್ ಅವರಿಗೂ ನಾಚಿಕೆಯಿಲ್ಲ ಎಂದರೆ ರಾಜೀನಾಮೆ ಕೊಡಲು ಹೋಗಬೇಡಿ. ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಅವರ ಕುರ್ಚಿ ಉಳಿಸಲು ಮುಳಗಿದೆ ಹೊರತು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಇನ್ನೇನು ಎರಡ್ಮೂರು ದಿನಗಳಲ್ಲಿ ದಿನಾಂಕ ಅಂತಿಮವಾಗಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುವುದು, ಈವರೆಗೆ ಅಭ್ಯರ್ಥಿಗಳನ್ನು ಹೆಸರನ್ನು ಅಂತಿಮಗೊಳಿಸಿಲ್ಲ ಎಂದು ತಿಳಿಸಿದರು.












Click it and Unblock the Notifications