Hubballi Violence : ಹುಬ್ಬಳ್ಳಿ ಗಲಭೆ; ದೇವಾಲಯ, ಆಸ್ಪತ್ರೆಗೆ ಸಚಿವರ ಭೇಟಿ
ಹುಬ್ಬಳ್ಳಿ, ಏಪ್ರಿಲ್ 18; ಶನಿವಾರ ರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ.
ಯುವಕ ವಾಟ್ಸಪ್ನಲ್ಲಿ ಎಡಿಟ್ ಮಾಡಿದ ಪ್ರಚೋದನಾಕಾರಿ ಪೋಸ್ಟರ್ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ಗಲಭೆ ಉಂಟಾಗಿತ್ತು. ಪೊಲೀಸರು, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಂತಾದವರು ಭಾನುವಾರ ಗಲಭೆ ನಡೆದ ಪ್ರದೇಶಗಳಿಗೆ ಭೇಟಿ ನೀಡಿದರು. ಗಲಭೆಯಲ್ಲಿ ಗಾಯಗೊಂಡ ಪೊಲೀಸರನ್ನು ಸೆಕ್ಯೂರ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂತಹ ಘಟನೆಗಳು ಎಲ್ಲಿಯೂ ನಡೆಯಬಾರದು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ತಪ್ಪು. ಪೊಲೀಸರ ಮೇಲೆ ಹಲ್ಲೆ ಮಾಡುವ ಹಂತಕ್ಕೆ ತಲುಪಿರುವುದನ್ನು ನೋಡಿ ಕೈಕಟ್ಟಿ ನಿಲ್ಲಲು ಸಾಧ್ಯವಿಲ್ಲ. ಈಗಾಗಲೇ ಗಲಭೆಕೋರರನ್ನು ಬಂಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇಂತಹ ಘಟನೆಗಳಿಗೆ ಪ್ರಚೋದನೆ ಕೊಡುವವರು ಮತ್ತು ಇಂತಹ ಗಲಭೆಯ ಪಿತೂರಿಯ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಶಕ್ತಿಗಳನ್ನು ಸಂಪೂರ್ಣವಾಗಿ ಹತ್ತಿಕ್ಕುವ ಕೆಲಸ ಪೊಲೀಸರು ಮಾಡುವಂತೆ ನಿರ್ದೇಶಿಸಲಾಗಿದೆ ಎಂದು ಭರವಸೆ ನೀಡಿದ್ದಾರೆ.

ದೇವಾಲಯಕ್ಕೆ ಸಚಿವರ ಭೇಟಿ
ಶನಿವಾರ ರಾತ್ರಿಯ ಗಲಭೆಯ ವೇಳೆ ದುಷ್ಕರ್ಮಿಗಳು ಆಂಜನೇಯ ಸ್ವಾಮಿ ದೇವಾಲಯದ ಮೇಲೂ ಕಲ್ಲು ತೂರಾಟ ನಡೆಸಿದ್ದರು. ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ಆಡಳಿತ ಮಂಡಳಿ ಮತ್ತು ಭಕ್ತರೊಂದಿಗೆ ಚರ್ಚಿಸಿದರು. ಹಾನಿಗೊಳಗಾದ ದೇವಾಲಯದ ಭಾಗವನ್ನು ಮರು ನಿರ್ಮಾಣ ಮಾಡುವ ಬಗ್ಗೆಯೂ ಚರ್ಚಿಸಿದರು.

ಪರಿಸ್ಥಿತಿ ಹತೋಟಿಯಲ್ಲಿ
ಶನಿವಾರ ರಾತ್ರಿ ಗಲಭೆ ನಡೆದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಪರಿಸ್ಥಿತಿ ಹತೋಟಿಯಲ್ಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹುಬ್ಬಳ್ಳಿ ನಗರದಾದ್ಯಂತ ಏಪ್ರಿಲ್ 20ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಭೆ ನಡೆದಿದ್ದ ಇಂಡಿ ಪಂಪ್ ವೃತ್ತ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಭಾನುವಾರ ಪಥ ಸಂಚಲನ ನಡೆಸಿದರು. ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.

89 ಮಂದಿಯ ಬಂಧನ
ಆನಂದ ನಗರದ ಯುವಕ ಅಭಿಷೇಕ ಹಿರೇಮಠ ವಾಟ್ಸಪ್ನಲ್ಲಿ ಎಡಿಟ್ ಮಾಡಿದ ಪ್ರಚೋದನಾಕಾರಿ ಪೋಸ್ಟರ್ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಗಲಭೆ ಉಂಟಾಗಿತ್ತು. ಅಭಿಷೇಕ ಹಿರೇಮಠ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 77ನೇ ವಾರ್ಡ್ನ ಸದಸ್ಯ, ಎಐಎಂಐಎಂ ಪಕ್ಷದ ಸದಸ್ಯೆ ಹುಸೇನಬಿ ನಾಲತವಾಡ ಪತಿ ಇರ್ಫಾನ್ ನಾಲತವಾಡ ಸೇರಿದಂತೆ 89 ಮಂದಿಯನ್ನು ಇದುವರೆಗೂ ಬಂಧಿಸಲಾಗಿದೆ.
Recommended Video

8 ತಂಡಗಳ ನಿಯೋಜನೆ
ಶನಿವಾರ ರಾತ್ರಿ ನಡೆದ ಗಲಭೆಯಲ್ಲಿ 12 ಪೊಲೀಸರು ಮತ್ತು ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಲಭೆಯಲ್ಲಿ ಭಾಗಿಯಾದವರ ಪತ್ತೆಗೆ 8 ತಂಡಗಳನ್ನು ರಚನೆ ಮಾಡಲಾಗಿದೆ.
ಗಲಭೆಗೆ ಸಂಬಂಧಿಸಿದಂತೆ ಬಂಧಿಸಿರುವ ಆರೋಪಿಗಳ ತಾಯಂದಿರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ನಮ್ಮ ಮಕ್ಕಳು ಅಮಾಯಕರು ಅವರನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮತ್ತು ಎಐಎಂಐಎಂ ಪಕ್ಷದ ನಾಯಕರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಮಾಯಕರ ಬದಲು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಹನುಮಂತ ದೇವಾಲಯದ ಮೇಲೆ ಕಲ್ಲು ತೂರಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.












Click it and Unblock the Notifications